ಬೆಂಗಳೂರು: ವಿಜಯಪುರ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ 6 ಮಂದಿಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಹತ್ತು ಮಂದಿಯನ್ನು ಬಂಧಿಸಲಾಗಿದೆ.
ವಿಜಯಪುರ ಜಿಲ್ಲೆ ಚಡಚಣ ತಾಲ್ಲೂಕಿನ ಗೋವಿಂದ ಪುರದಲ್ಲಿ ಶುಕ್ರವಾರ ಸಂಜೆ ನಡೆದ ಭೀಕರ ಆರು ಮಂದಿಯ ಹತ್ಯಾಕಾಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿರುವ ಅವರು ಉತ್ತರ ವಲಯದ ಐಜಿಪಿ ಸಂದೀಪ್ಪಾಟಿಲ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.
ಮಹರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ್ ತಾಲ್ಲೂಕಿನ ಕೂಡ್ಲಾ ಗ್ರಾಮದಲ್ಲಿ ಶನಿವಾರ ಮುಂಜಾನೆ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದೇವೆ ಎಂದು ಹೇಳಿದರು.
ಆಸ್ತಿ ವಿವಾದದಲ್ಲಿ ಜಗಳ ನಡೆದು ಕೊನೆಗೆ ಒಂದೇ ಕುಟುಂಬದ ಐದು ಸದಸ್ಯರು ಸೇರಿದಂತೆ ಆರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಘಟನೆಯಲ್ಲಿ ಹಂತಕರಿಂದ ಇಬ್ಬರು ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಚಡಚಣ ಠಾಣೆ ಪೊಲೀಸರು ಎಸ್ಪಿ ನೇತೃತ್ವದಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ. ಸ್ಥಳಕ್ಕೆ ಸೋಕೋ ತಂಡ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ಇದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಅಲ್ಲಿ ಮೊಕ್ಕಾಂ ಹೂಡಿದ್ದಾರೆ. ಮೂರು ಡಿಎಆರ್ ಹಾಗೂ ನಾಲ್ಕು ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.



