ವೀರಪ್ಪನ್ ಪ್ರಕರಣ ಸೇರಿದಂತೆ ಹಲವು ಮಹತ್ವದ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿ ಮನೆ ಮಾತಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ಪುತ್ರಿ ಅಪೂರ್ವ ಬಿದರಿ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.
ಅರೆನ್ಯಾಯಿಕ ಪ್ರಕರಣಗಳಲ್ಲಿ ದೋಷಪೂರಿತ ಆದೇಶ ಹೊರಡಿಸಿದ ಆರೋಪಗಳ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ ವಿರುದ್ಧ ಎಫ್ಐಆರ್ದಾಖಲಿಸಲು ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಶ್ವಾಸ್ ಆದೇಶಿಸಿದ್ದಾರೆ.
ಮೇಲ್ಮನವಿ ಪ್ರಕರಣಗಳ ವಿಲೇವಾರಿಯಲ್ಲಿ ಲೋಪ ಎಸಗಿದ್ದು, ರೆವಿನ್ಯೂ ಕಮಿಷನರ್ ಈ ಪ್ರಕರಣ ಪರಿಶೀಲನೆ ನಡೆಸಿದಾಗ 53 ಪ್ರಕರಣಗಳಲ್ಲಿ ಏಕಪಕ್ಷೀಯ ಆದೇಶ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಪೂರ್ವ ಬಿದರಿ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಅರೆ ನ್ಯಾಯಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ದೋಷಪೂರಿತ ಆದೇಶಗಳನ್ನು ಹೊರಡಿಸಿರುವ ಆರೋಪದಡಿ ಬೆಂಗಳೂರು ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಸ್ತುಕ್ರಮ ಜರುಗಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.
ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಜೂನ್ 30ರಂದು ಈ ಸಂಬಂಧ ಪತ್ರ ಬರೆಯಲಾಗಿದ್ದು, ಅಪೂರ್ವ ಬಿದರಿ ವಿರುದ್ಧ ಎಫ್ಐಆರ್ ದಾಖಲಿಸಿ ತುರ್ತಾಗಿ ಅನುಪಾಲನಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅಪೂರ್ವ ಬಿದರಿ ಬೆಂಗಳೂರು ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಈವರೆಗೆ ಹೊರಡಿಸಿರುವ ಅರೆ ನ್ಯಾಯಿಕ ಪ್ರಕರಣಗಳ ಆದೇಶಗಳನ್ನು ಪರಿಶೀಲಿಸಲು ತಂಡ ರಚಿಸಲಾಗಿತ್ತು. ಅಪೂರ್ವ ಬಿದರಿ 53 ಅರೆ ನ್ಯಾಯಿಕ ಪ್ರಕರಣಗಳನ್ನು ನಿರ್ಧರಿಸುವಲ್ಲಿ ಗಂಭೀರ ಕರ್ತವ್ಯ ಲೋಪ ಎಸಗಿದ್ದರಿಂದ ಸರ್ಕಾರಕ್ಕೆ 150 ಕೋಟಿ ರೂ. ವಂಚಿಸಿದ್ದಾರೆ ಎನ್ನಲಾಗಿದೆ.
ಅಪೂರ್ವ ಬಿದರಿ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ 1964ರ ಸೆಕ್ಷನ್ 35 ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 257ರ ಅಡಿ ಶಿಸ್ತುಕ್ರಮಕ್ಕೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಸರಕಾರ ಈ ಪ್ರಸ್ತಾವನೆ ಪರಿಶೀಲಿಸಿ, ಅಪೂರ್ವ ಬಿದರಿ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.



