ಹಾಸನದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಯುವಕರು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಲ್ಲಿ 190 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಾಸನದಲ್ಲಿ ಕಾಂಗ್ರೆಸ್ ಸಂಸದ ಶ್ರೇಯಸ್ ಎಂ.ಪಟೇಲ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮುದಾಯ ಹೃದಯಾಘಾತಕ್ಕೆ ಒಳಗಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.
ಕಳೆದ 2 ವರ್ಷಗಳಲ್ಲಿ ಜಿಲ್ಲೆಯಲ್ಲಿ 507 ಹೃದಯಾಘಾತ ಪ್ರಕರಣಗಳು ವರದಿಯಾಗಿದ್ದು, 190 ಸಾವುಗಳು ಸಂಭವಿಸಿವೆ. ಇದು ತಕ್ಷಣದ ಗಮನಹರಿಸಬೇಕಾದ ಗಂಭೀರ ಸಂಗತಿ ಎಂದು ಪಟೇಲ್ ಹೇಳಿದ್ದಾರೆ.
ಕೋವಿಡ್ ಲಸಿಕೆ ಮತ್ತು ಹೃದಯಾಘಾತ ಪ್ರಕರಣಗಳ ಹೆಚ್ಚಳದ ನಡುವೆ ಸಂಬಂಧವಿದೆಯೇ ಎಂದು ಪತ್ರಕರ್ತರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಂಸದ ಪಟೇಲ್, “ಲಸಿಕೆ ನೀಡಿ ಈಗಾಗಲೇ ಎರಡು ವರ್ಷಗಳಾಗಿವೆ. ಸದ್ಯಕ್ಕೆ ಇದರ ಬಗ್ಗೆ ಯಾವುದೇ ನಿರ್ದಿಷ್ಟವಾದ ಅಥವಾ ಅಧಿಕೃತ ಮಾಹಿತಿಯಿಲ್ಲ. ಅನಗತ್ಯ ಗೊಂದಲಗಳಿಗೆ ದಾರಿ ಮಾಡಿಕೊಡುವುದು ಬೇಡ,” ಎಂದು ಸ್ಪಷ್ಟಪಡಿಸಿದರು.



