ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ಗಳಲ್ಲಿ ಒಬ್ಬನಾದ ಉಮರ್ ಖಾಲಿದ್ಗೆ ದೆಹಲಿ ಹೈಕೋರ್ಟ್ ಶುಕ್ರವಾರ ಮೂರು ದಿನಗಳ ಮಧ್ಯಂತರ ಜಾಮೀನು ನೀಡಿದೆ.
ದೆಹಲಿಯ ಈಶಾನ್ಯ ಭಾಗಗಳಲ್ಲಿ ನಡೆದ ಗಲಭೆಯ ಹಿಂದಿನ ದೊಡ್ಡ ಪಿತೂರಿಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿ ಉಮರ್ ಖಾಲಿದ್ಗೆ ವಿರುದ್ಧ ಪ್ರಕರಣ ದಾಖಲಾಗಿದೆ.
ತಾಯಿಯ ಶಸ್ತ್ರಚಿಕಿತ್ಸೆಯ ಕಾರಣದಿಂದಾಗಿ ಖಾಲಿದ್ಗೆ ಜೂನ್ 1ರಿಂದ 3ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಹೈಕೋರ್ಟ್ ಪೀಠ ತಿಳಿಸಿದೆ. ಈ ವೇಳೆ, ಖಾಲಿದ್ ದೆಹಲಿ-ಎನ್ಸಿಆರ್ ಪ್ರದೇಶದಲ್ಲಿಯೇ ಇರಬೇಕು. ಆತ ನೀಡಿರುವ ವಿಳಾಸದಲ್ಲಿಯೇ ಇರುವುದಲ್ಲದೇ, ಆಸ್ಪತ್ರೆಯನ್ನು ಹೊರತುಪಡಿಸಿ ಬೇರೆ ಯಾವುದೇ ಸ್ಥಳಕ್ಕೆ ಭೇಟಿ ನೀಡಬಾರದು. ಮತ್ತು ಒಂದೇ ಮೊಬೈಲ್ ಸಂಖ್ಯೆಯನ್ನು ಬಳಸಬೇಕು ಎಂದು ನ್ಯಾಯಾಧೀಶರು ಷರತ್ತುಗಳನ್ನು ವಿಧಿಸಿದ್ದಾರೆ.
ಗುರುವಾರ, ವಿಚಾರಣಾ ನ್ಯಾಯಾಲಯವು ಖಾಲಿದ್ಗೆ ತನ್ನ ಚಿಕ್ಕಪ್ಪನ ಮರಣೋತ್ತರ 40 ದಿನಗಳ ಆಚರಣೆಯಲ್ಲಿ (ಚೆಹ್ಲಮ್) ಭಾಗವಹಿಸಲು ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ತನ್ನ ತಾಯಿಯನ್ನು ನೋಡಿಕೊಳ್ಳಲು 15 ದಿನಗಳ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿತ್ತು. ಹೀಗಾಗಿ ಖಾಲಿದ್ ಹೈಕೋರ್ಟ್ ಮೊರೆ ಹೋಗಿದ್ದ.
ವಿಚಾರಣಾ ನ್ಯಾಯಾಲಯವು ತನ್ನ ಮೃತ ಚಿಕ್ಕಪ್ಪನ ಸಮಾರಂಭಕ್ಕೆ ಹಾಜರಾಗುವುದು ಅಷ್ಟೊಂದು ಅಗತ್ಯವಿಲ್ಲ. ತಾಯಿಯನ್ನು ನೋಡಿಕೊಳ್ಳಲು ಕುಟುಂಬದ ಇತರ ಸದಸ್ಯರು ಇದ್ದಾರೆ ಎಂದು ಅಭಿಪ್ರಾಯಪಟ್ಟಿತ್ತು.
ಫೆಬ್ರವರಿ 2020ರ ಗಲಭೆಯ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬನಾದ ಖಾಲಿದ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದ್ದಲ್ಲದೇ, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 2019ರ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತು.
ದೆಹಲಿ ಪೊಲೀಸರ ವಿಶೇಷ ವಿಭಾಗವು ತನಿಖೆ ನಡೆಸುತ್ತಿರುವ ದೊಡ್ಡ ಪಿತೂರಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕಾರ್ಯಕರ್ತರಾದ ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಸೇರಿದಂತೆ ಇತರರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.
ಸೆಪ್ಟೆಂಬರ್ 2, 2025ರಂದು, ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ಪೀಠವು ಇಮಾಮ್, ಖಾಲಿದ್, ಮೀರಾನ್ ಹೈದರ್ ಮತ್ತು ಪ್ರಕರಣದ ಇತರ ಆರೋಪಿಗಳಿಗೆ ಜಾಮೀನು ನಿರಾಕರಿಸಿತ್ತು. ಈ ಆದೇಶವನ್ನು ಜನವರಿಯಲ್ಲಿ ಸುಪ್ರೀಂಕೋರ್ಟ್ ಎತ್ತಿಹಿಡಿದಿತ್ತು.



