ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ ನಿರ್ವಹಣಾ ಸಮಿತಿಯ ಸದಸ್ಯರೂ ಆಗಿರುವ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ 32 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ದೂರು ದಾಖಲಾಗುತ್ತಿದ್ದಂತೆ ಸ್ವಾಮೀಜಿ ತಲೆಮರೆಸಿಕೊಂಡಿದ್ದಾರೆ.
ದೆಹಲಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ ಮೆಂಟ್ ಸಂಸ್ಥೆಯ 17 ವಿದ್ಯಾರ್ಥಿನಿಯರು ಆಗಸ್ಟ್ 4ರಂದು ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ನಮ್ಮ ಮೇಲೆ ಹಾಗೂ ಇತರೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಕಾಲೇಜಿನ ಅಧ್ಯಾಪಕರೇ ಸ್ವಾಮೀಜಿಗೆ ಸಹಕರಿಸುವಂತೆ ಒತ್ತಡ ಹೇರಿದ್ದಾರೆ ಎಂದು ವಿದ್ಯಾರ್ಥಿನಿಯರು ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಆಶ್ರಮದಿಂದ ನಡೆಸಲಾಗುತ್ತಿದ್ದ ಶಿಕ್ಷಣ ಸಂಸ್ಥೆ ಇದಾಗಿದ್ದು, ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಅಲಿಯಾಸ್ ಪಾರ್ಥ ಸಾರಥಿ ಹೊಂದಿದ್ದ ಕಾರು ಕೂಡ ನಕಲಿ ದಾಖಲೆಗಳನ್ನು ಹೊಂದಿರುವುದು ತಿಳಿದು ಬಂದಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಿದ್ಧಂತೆ ಸ್ವಾಮೀಜಿ ತಲೆ ಮರೆಸಿಕೊಂಡಿದ್ದಾರೆ. ಪೊಲೀಸರ ತನಿಖೆ ವೇಳೆ ಸ್ವಾಮೀಜಿ ವಿರುದ್ಧ 2009 ಮತ್ತು 2016 ರಲ್ಲಿ ಎರಡು ಲೈಂಗಿಕ ಕಿರುಕುಳದ ದೂರು ದಾಖಲಾಗಿದ್ದವು ಎಂಬುದು ಬೆಳಕಿಗೆ ಬಂದಿದೆ.
ವಾಟ್ಸಪ್ ನಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಸ್ವಾಮೀಜಿ
ಸ್ವಾಮಿ ಚೈತನ್ಯಾನಂದ ಸರಸ್ವತಿ ಪಾರ್ಥ ಸಾರಥಿ, ಇಡಬ್ಲ್ಯೂಎಸ್ ವಿದ್ಯಾರ್ಥಿವೇ ತನದಡಿಯಲ್ಲಿ ಪಿಜಿಡಿಎಂ ಕೋರ್ಸ್ ವಿದ್ಯಾರ್ಥಿನಿಯರಿಗೆ ಅಶ್ಲೀಲವಾಗಿ ನಿಂದಿಸುತ್ತಿದ್ದರು. ಅಲ್ಲದೇ ವಾಟ್ಸಪ್ ಮೂಲಕ ಅಶ್ಲೀಲ ವೀಡಿಯೋ ಫೋಟೊ ಕಳುಹಿಸುತ್ತಿದ್ದರು. ಸ್ವಾಮೀಜಿ ಜೊತೆ ದೈಹಿಕ ಸಂಪರ್ಕಕ್ಕೆ ಕೆಲ ಮಹಿಳಾ ಅಧ್ಯಾಪಕರು ಹಾಗೂ ಆಡಳಿತಾಧಿಕಾರಿಗಳು ಒತ್ತಾಯಿಸುತ್ತಿದ್ದರು ಎಂದು ವಿದ್ಯಾರ್ಥಿನಿಯರು ದೂರಿನಲ್ಲಿ ತಿಳಿಸಿದ್ದಾರೆ.
ದೆಹಲಿ ಪೊಲೀಸರು 32 ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಈ ಪೈಕಿ 17 ಮಂದಿ ತಮ್ಮ ಮೇಲೆ ನಿಂದನೆಯ ಭಾಷೆ ಬಳಸಿದ್ದಾರೆ, ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾರೆಂದು ಹೇಳಿಕೊಂಡಿದ್ದಾರೆ.
ದೈಹಿಕ ಸಂಪರ್ಕಕಕ್ಕೆ ವಿರೋಧಿಸಿದಾಗ ಕೆಲ ಮಹಿಳಾ ಅಧ್ಯಾಪಕರು ಹಾಗೂ ಆಡಳಿತಾಧಿಕಾರಿಗಳು ಸಹಕರಿಸುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದರು. ಇದು ಒಂದು ದಿನದ ಸಮಸ್ಯೆಯಲ್ಲ ದೀರ್ಘಕಾಲದ ಸಮಸ್ಯೆ ಎಂದು ವಿದ್ಯಾರ್ಥಿಯರು ಅಳಲು ತೊಡಿಕೊಂಡಿದ್ದಾರೆ.
ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಹಲವಾರು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಘಟನಾ ಸ್ಥಳ ಮತ್ತು ಆರೋಪಿಯ ಮನೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸುತ್ತಿದ್ದಾರೆ. ಸ್ವಾಮೀಜಿ ಮನೆಯಲ್ಲಿದ್ದ ಕಂಪ್ಯೂಟರ್ನಿಂದ ಹಾರ್ಡ್ ಡಿಸ್ಕ್ ವಶಕ್ಕೆ ಪಡೆದು ಅದನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



