ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಂತರ ಚೇತರಿಸಿಕೊಳ್ಳುತ್ತಿರುವ ಪಾಕಿಸ್ತಾನದ ಉಗ್ರ ಸಂಘಟನೆಗಳು ಜಂಟಿಯಾಗಿ ಭಾರತದ ಜಮ್ಮು ಕಾಶ್ಮೀರದಲ್ಲಿ ಹೊಸ ದಾಳಿಗೆ ಸಂಚು ರೂಪಿಸಿವೆ ಎಂಬ ಸ್ಫೋಟಕ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ.
ಜಮ್ಮು ಕಾಶ್ಮೀರ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನಲ್ಲಿ ದಾಳಿ ನಡೆಸಲು ಲಷ್ಕರೆ ಇ-ತೋಯ್ಬಾ ಮತ್ತು ಜೈಷೇ ಇ- ಮೊಹಮದ್ ಸಂಘಟನೆಗಳು ಸಂಚು ರೂಪಿಸಿದ್ದು ಈ ನಿಟ್ಟಿನಲ್ಲಿ ಸಿದ್ಧತೆಗಳು ನಡೆಸಿವೆ ಎಂದು ಹೇಳಲಾಗಿದೆ.
ಪೆಹಲ್ಗಾಮ್ ನಲ್ಲಿ ಭಾರತೀಯ ಪ್ರವಾಸಿಗರ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳು ಹಾಗೂ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ 100ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈದಿತ್ತು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದು 6 ತಿಂಗಳ ನಂತರ ಉಗ್ರ ಸಂಘಟನೆಗಳು ಸಕ್ರಿಯವಾಗಿದ್ದು, ಕಳೆದ ಸೆಪ್ಟೆಂಬರ್ ನಿಂದ ಭಾರತದ ಗಡಿಯೊಳಗೆ ಅಕ್ರಮವಾಗಿ ಉಗ್ರರು ನಸುಳುತ್ತಿದ್ದಾರೆ. ಉಗ್ರರಿಗೆ ಪಾಕಿಸ್ತಾನದ ಐಎಸ್ ಐ ಮತ್ತು ಪಾಕಿಸ್ತಾನದ ವಿಶೇಷ ಸೇವಾ ಸಂಸ್ಥೆಗಳ ನೆರವಿನಿಂದ ಅಂತಾರಾಷ್ಟ್ರೀಯ ಗಡಿ ಮೂಲಕ ಭಾರತದೊಳಗೆ ಪ್ರವೇಶಿಸಲು ನೆರವು ನೀಡುತ್ತಿವೆ ಎಂದು ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ.



