ಬೆಂಗಳೂರಿನಲ್ಲಿ ಹಾಡುಹಗಲೇ ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಎಟಿಎಂ ವಾಹನದಲ್ಲಿದ್ದ 7.11 ಕೋಟಿ ರೂ ದರೋಡೆ ಮಾಡಿದ್ದ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಪ್ರಕರಣ ಭೇದಿಸಿರುವ ವಿಷಯ ಪ್ರಕಟಿಸಿದ್ದು, ಮೂವರನ್ನು ಬಂಧಿಸಿ 5.30 ಕೋಟಿ ವಶಪಡಿಸಿಕೊಂಡಿರುವುದಾಗಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಹೈದರಾಬಾದ್ ನ ಲಾಡ್ಜ್ ನಲ್ಲಿ ಅಡಗಿದ್ದ ಉಳಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದು, 70 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಇದರಿಂದ ಒಟ್ಟು ವಶಪಡಿಸಿಕೊಂಡ ಮೊತ್ತ 6.45 ಕೋಟಿ ಆಗಿದೆ.
ಹೈದರಾಬಾದ್ನ ಲಾಡ್ಜ್ವೊಂದರಲ್ಲಿದ್ದ ನವೀನ್, ನೆಲ್ಸನ್ ಹಾಗೂ ರವಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ಮ ದರೋಡೆ ಪ್ರಕರಣ ಮಾಸ್ಟರ್ ಮೈಂಡ್ ಗೋವಿಂದಪುರ ಠಾಣೆ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್, ಸಿಎಂಎಸ್ ಕಂಪನಿ ಹಳೆ ಉದ್ಯೋಗಿ ಕ್ಸೇವಿಯರ್, ಸಿಎಂಎಸ್ ವಾಹನ ವಿಭಾಗದ ಮೇಲ್ವಿಚಾರಕ ಗೋಪಿಯನ್ನು ಪೊಲೀಸರು ಬಂಧಿಸಿದ್ದರು.
ನವೆಂಬರ್ 19ರಂದು ಮಧ್ಯಾಹ್ನ ನಗರದ ಹೃದಯಭಾಗದಲ್ಲೇ ಆರೋಪಿಗಳು ದರೋಡೆ ನಡೆಸಿ ಪರಾರಿಯಾಗಿದ್ದರು. ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದ ಬೆಂಗಳೂರು ಪೊಲೀಸರು ಕೇವಲ ಮೂರೇ ದಿನದಲ್ಲಿ ಮೂವರನ್ನು ಬಂಧಿಸಿ 5.76 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದರು. ಇದೀಗ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ವಶಕ್ಕೆ ಪಡೆದ ಹಣದ ಮೊತ್ತ 6.45 ಕೋಟಿ ರೂಪಾಯಿ ಆಗಿದೆ.



