ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ ಐವಿ ಸೋಂಕು ಹರಡಿದೆ ಹಾಗೂ ಕಡ್ಡಾಯ ಪರೀಕ್ಷೆ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಆರೋಗ್ಯ ಸಚಿವ ಯುಟಿ ಖಾದರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಕಾಲೇಜು ವಿದ್ಯಾರ್ಥಿಗಳಲ್ಲಿ 7 ಸಾವಿರ ಜನರಿಗೆ ಹೆಚ್ಐವಿ ಸೋಂಕು ತಗಲಿದೆ ಎಂದು ಹರಡುತ್ತಿರುವ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಹೆಚ್ಐವಿ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂಬ ನಿಯಮವಿಲ್ಲ.ಶಾಲಾ-ಕಾಲೇಜುಗಳಲ್ಲಿ ಕೇವಲ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಸಾಮಾನ್ಯ ವ್ಯಕ್ತಿಗೆ ಹೆಚ್ಐವಿ ಪರೀಕ್ಷೆಯನ್ನು ಕಡ್ಡಾಯಗೊಳಿಸಿಲ್ಲ ಎಂದು ತಿಳಿಸಿದ್ದಾರೆ.
ಪ್ರಸ್ತುತ ಮುಖ್ಯವಾಗಿ ಎರಡು ಸಂದರ್ಭಗಳಲ್ಲಿ ಮಾತ್ರ ಹೆಚ್ಐವಿ ಪರೀಕ್ಷೆ ನಡೆಸಲಾಗುತ್ತಿದೆ. ಒಂದು ಗರ್ಭಿಣಿಯರ ಹೆರಿಗೆ ಸಮಯದಲ್ಲಿ, ಇನ್ನೊಂದು ರಕ್ತದಾನ ಮಾಡುವ ಸಮಯದಲ್ಲಿ ಎಂದು ಹೇಳಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಒಟ್ಟು 5,53,453 ಜನರನ್ನು ಪರೀಕ್ಷೆಗೊಳಪಡಿಸಿದ್ದು, ಅದರಲ್ಲಿ 3,091 ಸೋಂಕಿತರು ಪತ್ತೆಯಾಗಿದ್ದಾರೆ.
ಈ ಪೈಕಿ 2,81,742 ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 111 ಗರ್ಭಿಣಿಯರಲ್ಲಿ ಹೆಚ್ಐವಿ ಪಾಸಿಟಿವ್ ಕಂಡುಬಂದಿದೆ. ರಾಜ್ಯದಲ್ಲಿ 2004 ರಿಂದ ಇಲ್ಲಿಯವರೆಗೆ 39,028 ಸೋಂಕಿತರು ನೋಂದಾಯಿತರಾಗಿದ್ದಾರೆ. 18 ರಿಂದ 35 ವರ್ಷದೊಳಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
\ಸುಮಾರು 56,000 ಸೋಂಕಿತರು ಸದ್ಯ ತಪಾಸಣೆ ಮತ್ತು ನಿರಂತರ ಚಿಕಿತ್ಸಾ ವ್ಯಾಪ್ತಿಯಿಂದ ಹೊರಗುಳಿದಿರುವುದು ಕಂಡುಬಂದಿದ್ದು, ಅವರನ್ನು ಪತ್ತೆಹಚ್ಚಿ ಚಿಕಿತ್ಸೆಗೆ ತರುವ ಪ್ರಯತ್ನ ನಡೆಯುತ್ತಿದೆ. ರಾಜ್ಯದಲ್ಲಿ ಹೆಚ್ಐವಿ ಸೋಂಕಿತರ ಪ್ರಮಾಣ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಯಾವುದೇ ಅನಗತ್ಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.



