ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 93 ವರ್ಷದ ವೃದ್ದೆಗೆ ಅಧಿಕಾರಿಗಳು ಪೆರೋಲ್ ಮೇಲೆ ಬಿಡುಗಡೆ ಮಾಡಿ ಮಾನವೀಯತೆ ಮೆರೆದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುಗರಿಯ ಕೇಂದ್ರ ಕಾರಾಗೃಹ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ೯೩ ವರ್ಷದ ನಾಗಮ್ಮ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಶನಿವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಇತ್ತೀಚೆಗೆ ಜೈಲಿಗೆ ಭೇಟಿ ನೀಡಿದ್ದ ಉಪ ಲೋಕಾಯುಕ್ತ ಬಿ.ವೀರಪ್ಪ, ನಾಗಮ್ಮ ಅವರ ಸ್ಥಿತಿ ಕಂಡು ಮರುಗಿದ್ದರು. ಅಲ್ಲದೇ ಕೂಡಲೇ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸೂಚಿಸಿದ್ದರು.
ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ , ನಾಗಮ್ಮ ವಯೋಸಹಜ ಕಾಯಿಲೆಯಿಂದ ನರಳುತ್ತಿರುವ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದರು. ವರದಿ ಹಿನ್ನೆಲೆಯಲ್ಲಿ ೩ ತಿಂಗಳ ಕಾಲ ಪರೋಲ್ ನೀಡಿ ನಾಗಮ್ಮ ಅವರನ್ನು ಬಿಡುಗಡೆಗೊಳಿಸಲಾಗಿದೆ.
26 ವರ್ಷಗಳ ಹಿಂದೆ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ೩ ವರ್ಷಗಳ ಶಿಕ್ಷೆ ಪ್ರಕಟಿಸಲಾಗಿತ್ತು. ಒಂದು ವರ್ಷದಿಂದ ನಾಗಮ್ಮ ಜೈಲುವಾಸ ಅನಭವಿಸುತ್ತಿದ್ದರು ಎಂದು ಅಧೀಕ್ಷಕಿ ಅನಿತಾ ತಿಳಿಸಿದ್ದಾರೆ.



