ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಕುರಿತು 7 ದಿನದಲ್ಲಿ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, 7 ದಿನದಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು.
ಸೀಸೆರಿಯನ್ ವೇಳೆ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಆಸ್ಪತ್ರೆ ಎಂಡಿಗೆ ಪತ್ರ ಬರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಅಲ್ಲದೇ ಕಂಪನಿಯಿಂದ ಕೂಡ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಅವರು ನುಡಿದರು.
ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಅಸಹಜವಾಗಿ ಮೃತಪಟ್ಟಿದ್ದರು. ಸಾವಿಗೆ ಐವಿ ಗ್ಲೂಕೋಸ್ ಕಾರಣ ಎಂದು ಹೇಳಲಾಗಿತ್ತು. ಈ ಸಂಬಂಧ ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಅಧಿಕಾರಗಳ ಸಭೆ ನಡೆಸಲಾಯಿತು.
ಪರಿಶೀಲನಾ ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಸಚಿವರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.



