ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದಲ್ಲಿ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ಶುಕ್ರವಾರ ಸಂಭವಿಸಿದ್ದು, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅರ್ಫಾಜ್ ಹಾಗೂ ಮನೋಜ್ ಸ್ಥಳದಲ್ಲೇ ಅಸುನೀಗಿದ್ದಾರೆ.
ವಿಜಯಪುರ-ದೇವನಹಳ್ಳಿ ಬೈಪಾಸ್ ರಸ್ತೆಯಲ್ಲಿ ಡಿಯೋ ಗಾಡಿ ಮೂಲಕ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆ ಬರ್ತಿದ್ದ ಕ್ಯಾಂಟರ್ಗೆ ಗಾಡಿ ಡಿಕ್ಕಿಯಾಗಿದೆ.
ಯುವಕರು ವ್ಹೀಲಿಂಗ್ ಮಾಡುತ್ತಿರೋ ದೃಶ್ಯ ರಸ್ತೆಬದಿ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತದೇಹಗಳನ್ನು ದೇವನಹಳ್ಳಿ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.



