ಟಿಬೆಟ್-ನೇಪಾಳ ಗಡಿ ಭಾಗದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಹಿಮಾಲಯ ಸೇರಿದಂತೆ ಭಾರತದ ಹಲವು ಉತ್ತರ ರಾಜ್ಯಗಳಲ್ಲಿ ಭೂಮಿ ಕಂಪಿಸಿದೆ.
ಮಂಗಳವಾರ ಬೆಳಿಗ್ಗೆ 6.45ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಹಿಮಾಲಯ ಪರ್ವತದ ತಪ್ಪಲಲ್ಲಿ ಪದೇಪದೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಟಿಬೆಟ್ ಹಾಗೂ ನೇಪಾಳದ ಗಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1ರ ತೀವ್ರತೆ ದಾಖಲಾಗಿದೆ. ಅಲ್ಲದೇ ನಂತರವೂ ಹಲವು ಬಾರಿ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ಬಾರಿ 7.02 ಗಂಟೆಗೆ 4.7ರ ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದರೆ, 7.07 ನಿಮಿಷಕ್ಕೆ 4.9 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ. ಮೊದಲ ಬಾರಿ 10 ಕಿ.ಮೀ. ಆಳದಲ್ಲಿ ಭೂಕಂಪನದ ತೀವ್ರತೆ ಕಂಡು ಬಂದರೆ, ಮೂರನೇ ಬಾರಿ 30 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ.
ಭಾರತದಲ್ಲಿ ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಬಿಹಾರದಲ್ಲಿ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಆದರೆ ಯಾವುದೇ ಆಸ್ತಿಪಾಸ್ತಿ, ಪ್ರಾಣಹಾನಿ ಸಂಭವಿಸಿದ ವರದಿಯಾಗಿಲ್ಲ.



