ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದ ಜೊತೆಗೆ ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ’ಭೂ ಕಂದಾಯ ವಿಧೇಯಕ’ಕ್ಕೆ ಅಗತ್ಯ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ತಂದಿದೆ.
ಬೆಳಗಾವಿಯಲ್ಲಿ ಕಳೆದ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಈ ವಿಧೇಯಕವನ್ನು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಮಂಡಿಸಿದ್ದರು. ಈ ಕಾನೂನುಗಳನ್ನು ಸರಳೀಕರಣಗೊಳಿಸಿ ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಹಾಗೂ ಸಣ್ಣ ಉದ್ದಿಮೆದಾರರಿಗೆ ಸರಳ ಆಡಳಿತ ನೀಡುವ ಸಲುವಾಗಿ ಈ ಕಾನೂನಿಗೆ ಪ್ರಮುಖ 4 ತಿದ್ದುಪಡಿ ತಂದಿದೆ.
ಯಾವುದೇ ಜಮೀನು ಖಾಸಗಿ ವ್ಯಕ್ತಿಗೆ ಸೇರಿಲ್ಲದಿದ್ದಲ್ಲಿ ಅದು ಸರ್ಕಾರಕ್ಕೆ ಸೇರಿದೆ ಎಂಬ ಸಾರಾಂಶವನ್ನು ಕರ್ನಾಟಕ ಭೂ ಕಂದಾಯ ಕಾನೂನಿನ ಕಲಂ 67 ಹೇಳುತ್ತದೆ. ಕೆಲವರು ತಮ್ಮ ಹೆಸರಿಗೆ ಸದರಿ ಜಮೀನುಗಳ ಖಾತೆ ಮಾಡಿಕೊಡಿ ಎಂದು ತಹಶೀಲ್ದಾರರಿಗೆ ಮನವಿ ಮಾಡುತ್ತಾರೆ. ಆದರೆ, ಅವರ ಬಳಿ ಜಮೀನಿನ ಮಾಲೀಕತ್ವ ನಿರೂಪಿಸುವ ಮೂಲ ದಾಖಲೆ ಅಥವಾ ಸಮರ್ಪಕ ದಾಖಲೆ ಇಲ್ಲದಿದ್ದರೆ ಅವರಿಗೆ ಜಮೀನಿನ ಖಾತೆ ಮಾಡಿಕೊಡಲಾಗುವುದಿಲ್ಲ.
ತಹಶೀಲ್ದಾರರು ಖಾತೆ ಮಾಡಿಕೊಡದಿದ್ದಲ್ಲಿ ಅರ್ಜಿದಾರರು ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ಅಪೀಲು ಹೋಗುತ್ತಿದ್ದರು. ಆದರೆ, ಈ ಅಪೀಲನ್ನು ಉಪ ವಿಭಾಗಾಧಿಕಾರಿ ರ್ಯಾಂಕ್ ಮೇಲ್ಪಟ್ಟ ಅಧಿಕಾರಿಯೇ ಆಲಿಸಬೇಕು ಎಂದು ಈ ಹಿಂದಿನ ಕಾನೂನಿನಲ್ಲಿ ವ್ಯಾಖ್ಯಾನಿಸಲಾಗಿತ್ತು. ಹೀಗಾಗಿ ಇಂತಹ ಪ್ರಕರಣಗಳನ್ನು ಜಿಲ್ಲಾಧಿಕಾರಿಗಳೇ ನ್ಯಾಯ ತೀರ್ಮಾನ ಮಾಡುತ್ತಿದ್ದರು. ಆದರೆ, ಕೆಲವು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳೇ ಸಾರ್ವಜನಿಕ ಹಿತಾಸಕ್ತಿಯ ವಿರುದ್ಧ ಆದೇಶ ಮಾಡಿರುವ ಉದಾಹರಣೆಗಳಿವೆ. ಬೆಂಗಳೂರಿನಲ್ಲೇ ಇಂತಹ ಹಲವು ಪ್ರಕರಣಗಳು ನಡೆದಿವೆ.
ಖಾಸಗಿಯವರಿಗೆ ಮ್ಯುಟೇಷನ್ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿ, ಅವರ ಹೆಸರಿನಲ್ಲಿ ಖಾತೆಯೂ ಆಗಿರುವ ಸಾಕಷ್ಟು ಘಟನೆಗಳು ನಡೆದಿವೆ. ಇದನ್ನು ತಪ್ಪಿಸಲು ತಿದ್ದುಪಡಿ ತರಲಾಗಿದೆ. ಹಳೆಯ ಕಾನೂನಿನ ಪ್ರಕಾರ, ಜಿಲ್ಲಾಧಿಕಾರಿಗಳು ಆದೇಶ ಮಾಡಿದರೆ, ಪ್ರಕರಣದ ಮುಂದಿನ ಅಪೀಲು ನೇರವಾಗಿ ಸಿವಿಲ್ ನ್ಯಾಯಾಲಯಕ್ಕೆ ಹೋಗುತ್ತವೆ. ಪರಿಣಾಮ ಹೈಕೋರ್ಟ್ನಲ್ಲಿ ಸರ್ಕಾರ ಜೀತಿಗೆ ಸಿಲುಕಬೇಕಾದ ಪ್ರಸಂಗ ಎದುರಾಗಿದೆ.
ಇಂತಹ ಸಂದರ್ಭದಲ್ಲಿ ಕಾನೂನು ಹೋರಾಟಕ್ಕೆ ಸರ್ಕಾರಕ್ಕೆ ಹೆಚ್ಚಿನ ಕಾಲಾವಕಾಶವೇ ಸಿಗದಿರುವ ಸಾಧ್ಯತೆಯೇ ಹೆಚ್ಚು. ಪರಿಣಾಮ ನಾವು ಸಾರ್ವಜನಿಕ ಆಸ್ತಿಗಳನ್ನು ಸಂರಕ್ಷಿಸುವುದು ಕಷ್ಟವಾಗಬಹುದು. ಅದಕ್ಕಾಗಿಯೇ ಈಗ ಕಾನೂನಿಗೆ ತಿದ್ದುಪಡಿ ತಂದು ಮೊದಲ ಅಪೀಲನ್ನು ಆಲಿಸುವ ಅಧಿಕಾರವನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ.
ಹೆಚ್ಚಿನ ಕಾಲಾವಕಾಶ
ಹೊಸ ತಿದ್ದುಪಡಿಯ ಪ್ರಕಾರ, ಸರ್ಕಾರಕ್ಕೆ ಕಾನೂನು ಹೋರಾಟ ನಡೆಸಲು ಹೆಚ್ಚಿನ ಕಾಲಾವಕಾಶ ಸಿಗಲಿದೆ. ಮೊದಲ ಅಪೀಲಿನಲ್ಲಿ ಉಪ-ವಿಭಾಗಾಧಿಕಾರಿಗಳು ತಪ್ಪು ಆದೇಶ ಮಾಡಿದರೂ ಸಹ, ಜಿಲ್ಲಾಧಿಕಾರಿಗಳಲ್ಲಿ ಎರಡನೇ ಅಪೀಲು ಹೋಗಬಹುದು. ಮೂರನೇ ಅಪೀಲಿಗೆ ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣ ಅಸ್ತಿತ್ವದಲ್ಲಿದ್ದು, ಅಲ್ಲಿಗೂ ಮೊರೆ ಹೋಗುವ ಅವಕಾಶ ಕಲ್ಪಿಸಲಾಗಿದೆ.
ಕಂದಾಯ ಇಲಾಖೆ ತಕರಾರು ವಿಚಾರಣೆಗೆ ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣ ಅಸ್ಥಿತ್ವದಲ್ಲಿದೆ. ಯಾರೇ ಖಾಸಗಿ ವ್ಯಕ್ತಿ ಅಥವಾ ಸರ್ಕಾರ ಇಲ್ಲಿ ಅಪೀಲು ಮಾಡಬಹುದು. ಮೂರನೇ ಅಪೀಲು ಇಲ್ಲಿಗೆ ಇದ್ದು ಸರ್ಕಾರಕ್ಕೆ ತ್ವರಿತವಾಗಿ ನ್ಯಾಯ ಸಿಗುವ ವಿಶ್ವಾಸವಿದೆ. ಇದನ್ನೂ ಮೀರಿ ಮುಂದಿನ ಹಂತದಲ್ಲಿ ಹೈಕೋರ್ಟ್ ಮೊರೆ ಹೋಗಬಹುದು. ಒಟ್ಟಾರೆ ಈ ತಿದ್ದುಪಡಿಯ ಮೂಲ ಉದ್ದೇಶ ಸರ್ಕಾರಿ ಆಸ್ತಿಗಳನ್ನು ಸಂರಕ್ಷಿಸುವುದು ಮತ್ತು ಸರ್ಕಾರಕ್ಕೆ ಅನುಕೂಲವಾಗಲಿದೆ.
ತೆರವಿನ ಪರಮಾಧಿಕಾರ
ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ‘ಭಾಗದಲ್ಲಿ ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೆ. ಅದನ್ನು ತೆರವುಗೊಳಿಸುವ ಸಂಪೂರ್ಣ ಅಧಿಕಾರ ತಹಶೀಲ್ದಾರರಿಗೆ ಇದೆ. ಆದರೆ, ಕರ್ನಾಟಕ ‘ಭೂ ಕಂದಾಯ ಸೆಕ್ಷನ್ 104 ಕಾನೂನನ್ನು ಈ ಹಿಂದೆ ತುಂಬಾ ಕ್ಲಿಷ್ಟಕರವಾಗಿ ವ್ಯಾಖ್ಯಾನಿಸಲಾಗಿತ್ತು. ಆದರೆ, ಇದೀಗ ಈ ಕಾನೂನನ್ನು ಸರಳೀಕರಣಗೊಳಿಸಲಾಗಿದೆ. ಕಾಲುವೆ, ಬಿ-ಖರಾಬು ಸೇರಿದಂತೆ ಯಾವುದೇ ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೆ, ಅದನ್ನು ತೆರವುಗೊಳಿಸುವ ಪರಮಾಧಿಕಾರ ತಹಶೀಲ್ದಾರರಿಗೆ ಇದೆ ಎಂದು ತೀರಾ ಸರಳವಾಗಿ ಉಲ್ಲೇಖಿಸಲಾಗಿದೆ. ಈ ತಿದ್ದುಪಡಿ ಒತ್ತುವರಿಗಳನ್ನು ತೆರವುಗೊಳಿಸಿ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಲು ಮತ್ತಷ್ಟು ಬಲ ಸಿಕ್ಕಿದೆ.
ಅಭಿವೃದ್ಧಿಗೆ ತಿದ್ದುಪಡಿ
ಸಣ್ಣ ಕೈಗಾರಿಕೆಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲೂ ಸಹ ಕರ್ನಾಟಕ ‘ೂ ಕಂದಾಯ ವಿ‘ೇಯಕ್ಕೆ ಮಹತ್ವದ ತಿದ್ದುಪಡಿ ತರಲಾಗಿದೆ. ಟೌನ್ ಪ್ಲಾನಿಂಗ್ನಲ್ಲಿ ಈಗಾಗಲೇ ಕೈಗಾರಿಕಾ ಜೋನ್ ಎಂದು ನಮೂದಿಸಿದ್ದರೆ ಅಥವಾ ರೆಡ್ ಜೋನ್, ಯೆಲ್ಲೋ ಜೋನ್ ಎಂದು ಗುರುತಿಸಲಾಗಿದ್ದರೆ ಸಣ್ಣ ಕೈಗಾರಿಕೆಗಳ ಮಾಲೀಕರು ಮತ್ತೆ ನಮ್ಮ ಬಳಿ ಬಂದು ಕೈಗಾರಿಕಾ ವಲಯ ಎಂದು ಪರಿವರ್ತನೆಗೆ ಅನುಮತಿ ಕೇಳುವ ಅಗತ್ಯ ಇಲ್ಲ. ಎರಡು ಎಕರೆವರೆಗೆ ಪರಿವರ್ತನೆ ಅವಕಾಶ ತೆಗೆದುಹಾಕಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.



