ವಿಜಯನಗರ(ಹೊಸಪೇಟೆ): ತಾಂಡಾ, ಹಟ್ಟಿ, ಹಾಡಿ, ಕ್ಯಾಂಪ್ಗಳಲ್ಲಿನ ನಿವಾಸಿಗಳಿಗೆ ಕಂದಾಯ ಇಲಾಖೆಯಿಂದ 1 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುವ ಮೂಲಕ ವಿಜಯನಗರ ಜಿಲ್ಲೆಯನ್ನು ಸಂಪೂರ್ಣ ಪೋಡಿ ಮುಕ್ತ ಜಿಲ್ಲೆಯನ್ನಾಗಿಸಿರುವುದು ಸರ್ಕಾರದ ಮಹತ್ವದ ಸಾಧನೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ.20 ರಂದು ಜರುಗಲಿರುವ ಸಾಧನಾ ಸಮಾವೇಶ ಕಾರ್ಯಕ್ರಮದ ವೇದಿಕೆಯ ಪೂರ್ವಸಿದ್ದತೆಯನ್ನು ಪರಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದರು.
2023ರ ಮೇ.13 ರಂದು ರಾಜ್ಯದ ಜನತೆ ನಂಬಿಕೆ ಮತ್ತು ವಿಶ್ವಾಸವನ್ನಿಟ್ಟು ನಮಗೆ 136 ಸೀಟುಗಳನ್ನು ನೀಡುವ ಮೂಲಕ ಅಡಳಿತ ನಡೆಸಲು ಅಧಿಕಾರ ನೀಡಿದ್ದರು. ಸರ್ಕಾರದಿಂದ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ರಾಜ್ಯದ ನುಡಿದಂತೆ ನಡೆದ ಏಕೈಕ ಸರ್ಕಾರ ನಮ್ಮದಾಗಿದೆ.
ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಎರಡು ವರ್ಷ ಪೂರೈಸಿರುವ ರಾಜ್ಯ ಸರ್ಕಾರದ ಸಾಧನೆಯನ್ನು ಸಂಭ್ರಮಿಸುವ ನಿಟ್ಟಿನಲ್ಲಿ ವಿಜಯನಗರದಲ್ಲಿ ವಿಶೇಷವಾಗಿ ಆಚರಿಸಲಾಗುತ್ತಿದೆ. ಸರ್ಕಾರದ ಫಲಾನುಭವಿಗಳಿಗೆ ನವಚೈತನ್ಯ ಮೂಡಿಸಲು ರಾಜ್ಯ ಸರ್ಕಾರದ ಎಲ್ಲಾ ಸಚಿವರು, ಶಾಸಕರುಗಳು ಸೇರಿ ಸಮರ್ಪಣಾ ಸಂಕಲ್ಪವನ್ನು ಸಲ್ಲಿಸಲಾಗುತ್ತದೆ ಎಂದರು.
ಜನರಲ್ಲಿ ಹೊಸ ಶಕ್ತಿ ತುಂಬಬೇಕಿದೆ. ಜನರಿಗೆ ಈ ಎಲ್ಲಾ ಯೋಜನೆಗಳನ್ನು ಪೂರ್ಣಾವಧಿವರೆಗೆ ಸಮರ್ಪಕವಾಗಿ ನೀಡುವ ಭರವಸೆಯನ್ನು ನೀಡುತ್ತೇವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳು ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈ ವೇಳೆ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಯೋಜನಾ ಸಚಿವರಾದ ಡಿ.ಸುಧಾಕರ್, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಬಳ್ಳಾರಿ ಗ್ರಾಮಾಂತರ ಶಾಸಕರಾದ ಬಿ.ನಾಗೇಂದ್ರ, ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಬಳ್ಳಾರಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ಮೊಹಮ್ಮದ್ ನೋಂಗ್ಜಾಯ್ ಅಕ್ರಮ್ ಷಾ ಅಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶ್ರೀಹರಿಬಾಬು.ಬಿ.ಎಲ್, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಇತರರಿದ್ದರು.



