ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಸಾಹಿತಿ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಪ್ರೊ.ದೊಡ್ಡ ರಂಗೇಗೌಡರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೊ. ದೊಡ್ಡ ರಂಗೇಗೌಡರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಅವರು ಈ ವಿಷಯ ತಿಳಿಸಿದರು.
ಆಸ್ಪತ್ರೆಯ ವೈದ್ಯರಲ್ಲಿ ದೊಡ್ಡ ರಂಗೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವ ಶಿವರಾಜ ತಂಗಡಗಿ ಅವರು ಅವರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸುವುದಾಗಿ ತಿಳಿಸಿದರು. ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ಸೂಚಿಸಿದರು.
ಪ್ರೊ.ದೊಡ್ಡ ರಂಗೇಗೌಡರ ಕುಟುಂಬ ಸದಸ್ಯರನ್ನು ಸಹ ಭೇಟಿ ಮಾಡಿದ ಸಚಿವ ಶಿವರಾಜ ತಂಗಡಗಿ ಅವರಿಗೆ ಧೈರ್ಯ ಹೇಳಿದರು. ಪ್ರೊ. ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲ ರೀತಿಯ ನೆರವನ್ನು ನೀಡುವುದಾಗಿ ತಿಳಿಸಿದರು.



