Saturday, May 16, 2026
Google search engine
Homeರಾಜ್ಯಜಾತಿ ಅಸಮಾನತೆಯಿಂದ ವೈಜ್ಞಾನಿಕ ಮನೋಭಾವಕ್ಕೆ ಅಡ್ಡಿ: ಸಿಎಂ ಸಿದ್ದರಾಮಯ್ಯ

ಜಾತಿ ಅಸಮಾನತೆಯಿಂದ ವೈಜ್ಞಾನಿಕ ಮನೋಭಾವಕ್ಕೆ ಅಡ್ಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಜನ‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ `ಕುವೆಂಪು ವಿಚಾರ ಕ್ರಾಂತಿ’ ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಆದರೆ ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ ಎಂದರು.

ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕಯಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ. ಈ ಕತೆಯನ್ನು ಕೆಲವು ಜನರೂ ನಂಬುವುದರಿಂದ ನಮಗೆ ಮತಗಳೇ ಬರುವುದಿಲ್ಲ ಎಂದು ವಿವರಿಸಿದರು.

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೇ ಮೌಡ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೇ ಒಳಪಟ್ಟರಬೇಕು ಎಂದರು.

ಗುಡಿ, ಚರ್ಚು, ಮಸೀದಿಗಳ ಬಿಟ್ಟು ಬನ್ನಿ. ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಜಾರಿಯಾಗಲಿ ಎಂದು ಆಶಿಸಿದರು.

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯ

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ಸರ್ಕಾರದ ಅಭಿಪ್ರಾಯ ಆಗುವ, ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ನಾಡೋಜ ಡಾ. ಹಂ.ಪ.ನಾಗರಾಜಯ್ಯ, ವಿಶ್ರಾಂತ ನ್ಯಾಯಾಧೀಶರಾದ ಹೆಚ್.ಎನ್.ನಾಗಮೋಹನ್ ದಾಸ್, ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ, ಕೃತಿಯ ಸಂಪಾದಕರಾದ ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ಜನ ಪ್ರಕಾಶನದ ಬಿ.ರಾಜಶೇಖರಮೂರ್ತಿ, ಹೆಚ್.ಎನ್.ಹರಿ, ಎ.ವಿ.ಶ್ರೀಹರಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments