ತಾನೇ ಹಾಡು ಬರೆದು ಹಾಡಿ ಮನೆಮಾತಾಗಿದ್ದ ಯುವ ಗಾಯಕನನ್ನು 5000 ರೂ.ಗಾಗಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ (ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ಶನಿವಾರ ತಡರಾತ್ರಿ ಯುವ ಗಾಯಕ ಮಾರುತಿ ಅಡಿವೆಪ್ಪ ಲಠ್ಠೆ (22) ಹತ್ಯೆ ಮಾಡಲಾಗಿದೆ.
ಸ್ನೇಹಿತನೊಂದಿಗೆ ಬೈಕ್ನಲ್ಲಿ ಅಡಿವೆಪ್ಪ ತೆರಳುತ್ತಿದ್ದಾಗ ಈರಪ್ಪ ಆ್ಯಂಡ್ ಗ್ಯಾಂಗ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದೂ ಅಲ್ಲದೇ ಬಳಿಕ ಕಾರು ಹಾಯಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುಗಳನ್ನು ರಚಿಸಿ ತಾನೇ ಸಂಗೀತ ನೀಡಿ ಹಾಡುತ್ತಿದ್ದ ವಿಶಿಷ್ಟ ಪ್ರತಿಭಾಶಾಲಿ ಗಾಯಕರಾಗಿದ್ದ ಮಾರುತಿ ಅಡಿವೆಪ್ಪ ತನ್ನದೇ ಆದ ಯೂಟ್ಯೂಬ್ ಚಾನೆಲ್ನಲ್ಲಿ ಹಾಡುಗಳನ್ನು ಪೋಸ್ಟ್ ಮಾಡುತ್ತಿದ್ದರು. ಇತ್ತೀಚೆಗೆ ಜನಪ್ರಿಯತೆ ಪಡೆಯುತ್ತಿದ್ದ ಮಾರುತಿ ಅಡಿವೆಪ್ಪ ಹತ್ಯೆ ಭಾರೀ ಆಘಾತ ಉಂಟು ಮಾಡಿದೆ.
ಕಬ್ಬಿನ ಕಟಾವು ಮಾಡುವ ಗ್ಯಾಂಗ್ನಲ್ಲಿ ಕೆಲಸ ಮಾಡುವ ನಿಟ್ಟಿನಲ್ಲಿ ಆರೋಪಿ ಈರಪ್ಪ ಅಕ್ಕಿವಾಟೆ ಬಳಿ 50 ಸಾವಿರ ರೂಪಾಯಿ ಸಾಲ ಪಡೆದಿದ್ದ ಮಾರುತಿ 45 ಸಾವಿರ ರೂಪಾಯಿ ವಾಪಸ್ ಕೊಟ್ಟಿದ್ದ. ನಂತರ ತನ್ನ ಹಾಡುಗಳಿಗೆ ಭಾರೀ ಡಿಮ್ಯಾಂಡ್ ಬಂದ ಹಿನ್ನೆಲೆಯಲ್ಲಿ ಕಬ್ಬು ಕಟಾವು ಮತ್ತು ಕಾರ್ಖಾನೆಗೆ ಸಾಗಣೆ ಮಾಡುವ ಗ್ಯಾಂಗ್ ಕೆಲಸ ಬಿಟ್ಟು ಸಂಗೀತದ ಕಡೆಗೆ ಹೆಚ್ಚಿನ ಗಮನ ಹರಿಸುತ್ತಿದ್ದ.
ಇದು ಈರಪ್ಪನ ಕೆಂಗಣ್ಣಿಗೆ ಗುರಿಯಾದ್ದು, ಬಾಕಿ ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಗ್ಯಾಂಗ್ ಕಟ್ಟಿಕೊಂಡು ಹೋಗಿ ಮಾರುತಿಯನ್ನು ಈರಪ್ಪ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಾರಕಾಸ್ತ್ರಗಳಿಂದ ಕೊಚ್ಚಿ, ಬಳಿಕ ಮಾರುತಿ ಮೇಲೆ ಕಾರು ಹಾಯಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಮಾರುತಿ ಮೇಲೆ ಕಾರು ಹರಿಸಿದ್ದರಿಂದ ದುಷ್ಕರ್ಮಿಗಳ ಕಾರು ಕೂಡ ಪಲ್ಟಿಯಾಗಿ ಕೆಲವರು ಗಾಯಗೊಂಡಿದ್ದಾರೆ. ಈ ವೇಳೆ ಆರೋಪಿ ಈರಪ್ಪ ಅಕ್ಕಿವಾಟೆಗೆ ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಬಾಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈಗಾಗಲೇ ಸಿದ್ದರಾಮ ವಡೆಯರ್ ಹಾಗೂ ಆಕಾಶ್ ಪೂಜಾರಿಯನ್ನ ಬಂಧಿಸಿರುವ ಪೊಲೀಸರು, ಇತರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.



