ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಾಜ್ಯಪಾಲರ ಲೆಟರ್ ಹೆಡ್ ಬಳಸಿ ಹಾಗೂ ನಕಲಿ ಸಹಿ ಹಾಕಿ ಸರ್ಕಾರಿ ನೌಕರಿ ಕೊಡಿ 30 ಲಕ್ಷಕ್ಕೂ ಅಧಿಕ ಮೊತ್ತ ವಂಚಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೌಕರಿ ಆಮಿಷವೊಡ್ಡಿ ಲಕ್ಷಾಂತರ ಹಣ ವಂಚಿಸಿದ ಬಗ್ಗೆ ಸ್ವತಃ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.
ದೂರು ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೂ ಪತ್ರ ಬರೆದಿದ್ದರು. ವಂಚನೆ ಒಳಗಾದವರು ದೂರು ದಾಖಲಿಸಲು ಮುಂದೆ ಬಾರದ ಕಾರಣದಿಂದ ಪ್ರಕರಣ ದಾಖಲಾತಿಯಲ್ಲಿ ವಿಳಂಬವಾಗಿದೆ ಎಂದು ಹೇಳಿದರು.
ಪ್ರಮುಖ ಆರೋಪಿ ಮಂಜುನಾಥ ಮಲ್ಲಸರ್ಜ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ 14 ಮಂದಿಯಿಂದ 30 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿರುವ ಬಗ್ಗೆ ದೂರು ಇದೆ. ಈತ ರಾಜ್ಯಪಾಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಅವರ ಆಪ್ತಸಹಾಯಕರ ಸಹಿಯನ್ನೂ ನಕಲು ಮಾಡಿದ್ದಾನೆ. ಜೊತೆಗೆ ಸಚಿವರ ಲೆಟರ್ಹೆಡ್ಗಳನ್ನು ಬಳಸಿರುವುದು ಕೂಡ ಪತ್ತೆಯಾಗಿದೆ ಎಂದು ತಿಳಿಸಿದರು.
ಕೆಲ ಸಾಮಾಜಿಕ ಕಾರ್ಯಕರ್ತರು ಈ ಪ್ರಕರಣದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತಸಹಾಯಕ ಸೋಮನಗೌಡ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಚಾರ ತನಿಖೆ ಹಂತದಲ್ಲಿದೆ. ಸದ್ಯಕ್ಕೆ ಸೋಮನಗೌಡ ಭಾಗಿಯಾದ ಬಗ್ಗೆ ಯಾವುದೇ ಸಾಕ್ಷಿಗಳು ಇಲ್ಲ. ಇದೆಲ್ಲವನ್ನೂ ತನಿಖೆ ಮಾಡುವಂತೆ ಸ್ವತಃ ಸಚಿವರೇ ಸೂಚಿಸಿದ್ದಾರೆ ಎಂದರು.
ವಂಚನೆಗೊಳಗಾದ ಬಗ್ಗೆ ಕಾವ್ಯಾ ಎಂಬವರು ಮಾತನಾಡಿದರು. ತಾವು ಸಚಿವರನ್ನು ನಂಬಿ ದೂರು ನೀಡಿರಲಿಲ್ಲ ಎಂದರು. ನಾಲ್ಕು ತಿಂಗಳ ಬಳಿಕ ಇನ್ನೊಬ್ಬ ಮಹಿಳೆ ಲಿಖಿತ ದೂರು ನೀಡಿದ್ದರಿಂದ ಈಗ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಆರೋಪಿಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಿದ್ದು, ಆತನನ್ನು ಬಂಧಿಸಿಲ್ಲ. ಇದರಲ್ಲಿ ಯಾವುದೇ ರಾಜಕೀಯ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದರು.
ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಜಯಂತ ತಿಣೈಕರ್, ಈ
ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡ ಇದೆ. ಫೋನ್ ಪೇ, ಬ್ಯಾಂಕ್ ಖಾತೆ ಮೂಲಕ 34 ಲಕ್ಷಕ್ಕಿಂತ ಹೆಚ್ಚಿನ ಪಡೆದು ವಂಚಿಸಿದ್ದಾರೆ. ಆದರೆ ರಾಜಕೀಯ ಒತ್ತಡದಿಂದ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ವಹಿಸುತ್ತಿಲ್ಲ. ಅನ್ಯಾಯಕ್ಕೆ ಒಳಗಾದವರನ್ನು ಪದೇ ಪದೇ ಪೊಲೀಸ್ ಠಾಣೆಗೆ ಕರೆಸಿ ತೊಂದರೆ ಕೊಡುತ್ತಿದ್ದಾರೆ ಎಂದು ದೂರಿದರು.



