ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಹಾಗೂ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಎತ್ತಿ ಹಿಡಿದ್ದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ, ಜಾಮೀನು ರದ್ದುಗೊಳಿಸಿದ್ದೂ ಅಲ್ಲದೇ ಜೈಲಿನಲ್ಲಿ ವಿಐಪಿ ಸೌಲಭ್ಯ ನೀಡಿದರೆ ಪೊಲೀಸ್ ಆಯುಕ್ತರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ತತ್ ಕ್ಷಣವೇ ಅಮಾನತುಗೊಳಿಸುವುದಾಗಿ ಎಚ್ಚರಿಕೆ ನೀಡಿತ್ತು.
ಸುಪ್ರೀಂಕೋರ್ಟ್ ತೀರ್ಪು ನಿರೀಕ್ಷಿಸಿದ್ದ ಪೊಲೀಸರು ದರ್ಶನ್ ಹಾಗೂ ಸಹಚರರು ಶರಣಾಗುವ ಮುನ್ನವೇ ಬಂಧಿಸಿದ್ದಾರೆ. ತೀರ್ಪು ಬಂದ ನಂತರ ಪೊಲೀಸರಿಗೆ ಶರಣಾಗುವ ಆಲೋಚನೆಯಲ್ಲಿ ಇದ್ದಾಗಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ದರ್ಶನ್, ಪವಿತ್ರಾ ಗೌಡ ಹಾಗೂ ಆಪ್ತನನ್ನು ಬಂಧಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೆ ಅಲರ್ಟ್ ಆದ ಪೊಲೀಸರು ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿದ್ದ ದರ್ಶನ್ ಹಾಗೂ ಪವಿತ್ರಾ ಗೌಡ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದರು. ಇದೇ ವೇಳೆ ದರ್ಶನ್ ಆಪ್ತ ಪ್ರದೂಷ್ ಅವರನ್ನು ಬಂಧಿಸಲಾಗಿದ್ದು, ಉಳಿದ ೪ ಸಹಚರರ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಪೊಲೀಸರು ಅಪಾರ್ಟ್ಮೆಂಟ್ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ. ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಗುರುವಾರ ಬೆಳಿಗ್ಗೆ ಪೊಲೀಸರು ಅರೆಸ್ಟ್ ಮಾಡಿದ್ದರು.
ಸುಪ್ರೀಂ ಕೋರ್ಟ್ ತೀರ್ಪು ಹೊರಬರುವ ಮುನ್ನ ಪವಿತ್ರಾ ಗೌಡ ದೇವರ ಮೊರೆ ಹೋಗಿದ್ದರು. ಜೊತೆಗೆ ಮನೆಯಲ್ಲಿ ತುಳಸಿ ಗಿಡಕ್ಕೆ ಪೂಜೆ ಸಲ್ಲಿಸಿದ್ದರು. ತೀರ್ಪು ಹೊರಬರುತ್ತಿದ್ದಂತೆ ಮನೆಯಲ್ಲಿ ಪವಿತ್ರಾ ಗೌಡ, ತಾಯಿ ಎದುರು ಬಿಕ್ಕಳಿಸಿ ಅತ್ತಿದ್ದಾರೆ. ಈ ವೇಳೆ ಮನೆ ಬಳಿ ಪೊಲೀಸರು ಬಂಧನಕ್ಕೆ ಕಾದು ನಿಂತಿದ್ದರು. ಮನೆಯ ಬಾಗಿಲು ತೆರೆದಂತೆ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.



