ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಕ್ಕಾಗಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ನೀಡಿದ ದೂರಿನ ಅನ್ವಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬುಧವಾರ (ಆಗಸ್ಟ್ 21) ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಉಜಿರೆಯಲ್ಲಿ ಗುರುವಾರ ಬೆಳಿಗ್ಗೆ ಮಹೇಶ್ ತಿಮರೋಡಿ ಅವರನ್ನು ವಶಕ್ಕೆ ಪಡೆದರು.
ಫೇಸ್ಬುಕ್ ಪೇಜ್ನಲ್ಲಿ ವಿಡಿಯೋ ಮಾಡಿ ಮಹೇಶ್ ಶೆಟ್ಟಿ ತಿಮರೋಡಿ ಸಂತೋಷ್ ಅವರನ್ನು ಅವಹೇಳನ ಮಾಡಿ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರಾಜೀವ ಕುಲಾಲ್ ಪೊಲೀಸರಿಗೆ ದೂರು ನೀಡಿದ್ದರು.
ಬಿಎನ್ಎಸ್ 196(1), 352, 353(2) ಅಡಿ ಮಹೇಶ್ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇಂದು ಇದೇ ಪ್ರಕರಣಕ್ಕೆ ಸಂಬಂಧ ಪಟ್ಟಿರುವಂತೆ ಬ್ರಹ್ಮಾವರ ಪೊಲೀಸರು ಉಜಿರೆಯ ಮನೆಯಲ್ಲಿ ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಬ್ರಹ್ಮಾವರ ಠಾಣೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಮಹೇಶ್ ತಿಮರೋಡಿ ಅವರನ್ನು ವಶಕ್ಕೆ ಪಡೆದಿರುವ ವಿಚಾರವನ್ನು ಉಡುಪಿ ಎಸ್ ಪಿ ದೃಢಪಡಿಸಿದ್ದು, ಪ್ರಕರಣದಲ್ಲಿ ಎರಡು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.



