ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಪಮೊರಿಯನ್ ನಾಯಿ ಎಂದು ಅವಹೇಳನಕಾರಿ ನಿಂದನೆ ಮಾಡಿದ ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಪೊಲೀಸ್ ಎಫ್ ಐಆರ್ ದಾಖಲಿಸಿದ್ದಾರೆ.
ನನ್ನ ಕುರಿತು ಬಿಜೆಪಿ ಶಾಸಕ ಬಿಪಿ ಹರೀಶ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ.
ಉಮಾ ಪ್ರಶಾಂತ್ ನೀಡಿದ ದೂರು ಆಧರಿಸಿ ಬುಧವಾರ ಬೆಳಿಗ್ಗೆ 10ಕ್ಕೂ ಹೆಚ್ಚು ಪೊಲೀಸರು ಬಿಪಿ ಹರೀಶ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ ಅವರು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮರಳಿದ್ದು, ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಇತ್ತೀಚೆಗೆ ಶಾಸಕ ಬಿ.ಪಿ.ಹರೀಶ್ ಸುದ್ದಿಗೋಷ್ಠಿಯಲ್ಲಿ ಎಸ್ಪಿಯವರನ್ನು ನಾಯಿಗೆ ಹೋಲಿಸಿ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ಶಾಸಕರ ವಿರುದ್ದ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಶಾಸಕರಿಗೆ ಬೆಲೆಯೇ ಕೊಡುವುದಿಲ್ಲ. ಶಾಸಕರು ಸಭೆಯಲ್ಲಿ ಇದ್ದರೆ ಮುಖ ತಿರುಗಿಸಿ ಕೂರುತ್ತಾರೆ. ಶಾಮನೂರು ಮನೆಯ ಬಾಗಿಲನ್ನು ನಾಯಿಯ ರೀತಿ ಗಂಟೆಗಟ್ಟಲೆ ಕಾಯುತ್ತಾರೆ. ಎಸ್ಪಿ ಶಾಮನೂರು ಕುಟುಂಬದ ಪೊಮೆರಿಯನ್ ನಾಯಿಯಂತೆ ವರ್ತಿಸುತ್ತಾರೆ ಎಂದು ನಾಲಗೆ ಹರಿಬಿಟ್ಟಿದ್ದರು.
ಇವರಿಗೆ ಅಧಿಕಾರದಲ್ಲಿರುವವರು ಮಾತ್ರ ಮುಖ್ಯವಾಗಿ ಕಾಣುತ್ತಾರೆ ಎನ್ನಿಸುತ್ತದೆ. ಎಲ್ಲಾ ಜನಪ್ರತಿನಿಧಿಗಳನ್ನು ಸಮಾನವಾಗಿ ಕಾಣುವ ದೃಷ್ಟಿಕೋನ ಇಲ್ಲ. ಈ ಅಧಿಕಾರ ತಾತ್ಕಾಲಿಕ ಅನ್ನುವುದನ್ನು ಎಸ್ಪಿ ಅರಿತುಕೊಳ್ಳಬೇಕು ಎಂದು ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ ಟೀಕಿಸಿದ್ದರು.
ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ 132 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.



