Saturday, May 16, 2026
Google search engine
Homeರಾಜ್ಯನಾವು ಸತ್ಯದಿಂದ ಇದ್ದೇವೆ, ಮುಂದೆಯೂ ಇರುತ್ತೇವೆ: ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಕೃತಜ್ಞತೆ

ನಾವು ಸತ್ಯದಿಂದ ಇದ್ದೇವೆ, ಮುಂದೆಯೂ ಇರುತ್ತೇವೆ: ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಕೃತಜ್ಞತೆ

ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ (SIT) ತನಿಖೆಯಿಂದ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ಶುಕ್ರವಾರ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣದ ಕುರಿತು ಎಸ್ ಐಟಿ ಅರ್ಧ ವರದಿ ಬಂದಿದೆ. ಆದ್ದರಿಂದ ನಾನು ಇವತ್ತು ಧೈರ್ಯದಿಂದ ಮಾತನಾಡುತ್ತಿದ್ದೇನೆ.  ಎಸ್ ಐಟಿ ರಚಿಸಿ ಸತ್ಯ ಜನರ ಮುಂದೆ ತಂದಿದ್ದಾರೆ. ಇದಕ್ಕಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಧರ್ಮಸ್ಥಳದ ಹೊಳಪು ಹಾಗೆ ಇರುತ್ತದೆ. ನಾವು ಸತ್ಯವಾಗಿ ಇದ್ದೇವೆ. ಮುಂದೆಯೂ ಇರುತ್ತೇವೆ. ಧರ್ಮಸ್ಥಳದ ವಿರುದ್ಧ ಅಪಾದನೆ ಮಾಡಿದವರನ್ನು ಮಂಜುನಾಥ ಮತ್ತು ಅಣ್ಣಪ್ಪ ನೋಡಿಕೊಳ್ಳುತ್ತಾನೆ ಎಂದು ಅವರು ಹೇಳಿದರು.

ಕೋವಿಡ್ ಹಾಗೂ ಈಗ ಅನೇಕ ಪುಸ್ತಕಗಳನ್ನು ನಾನು ಓದುತ್ತಿದ್ದೇನೆ. ಸಿದ್ದಗಂಗಾ ಶ್ರೀಗಳ ಹಲವು ಪುಸ್ತಕ ನಾನು ಓದಿದ್ದೇನೆ. ನಮ್ಮನ್ನ ಹೊಗಳಿದ್ದೀರಿ, ಆದರೆ ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಅಂತ ಇದೆ. ಸಿದ್ದಗಂಗಾ ಶ್ರೀಗಳು 108 ವರ್ಷ ಬದುಕಿದವರು ಹೇಳಿದ ಮಾತು. ಶತ್ರುತ್ವ ಯಾಕೆ ಬಂತು ಅಂತ ನಮಗೆ ಗೊತ್ತಿಲ್ಲ. ಇಷ್ಟು ಹಗೆತನ, ಅಪವಾದ ಯಾಕೆ ಬಂತು ಅಂತ ಗೊತ್ತಿಲ್ಲ ಎಂದು ಅವರು ನುಡಿದರು.

ನಾವು ಸೇವೆ ಮಾಡುತ್ತೇವೆ, ಆದರೆ ಸೇವೆ ಪ್ರಚಾರದ ವಸ್ತುವಲ್ಲ. ಇಷ್ಟು ವರ್ಷ ನಾವು ಆರೋಗ್ಯವಾಗಿರಲು ನಮ್ಮ ನಿಸ್ವಾರ್ಥ ಸೇವೆಯೇ ಕಾರಣ. ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ನೀವು ಎಲ್ಲರೂ ಗಮನಿಸಿದ್ದೀರಿ. ನಾವು ಇಲ್ಲಿ ನಿಮಿತ್ತ ಮಾತ್ರ, ಆದರೆ ಮುಂದುವರೆಸಿಕೊಂಡು ಹೋಗಿದ್ದು ಅದಕ್ಕೆ ಸಂಬಂಧಪಟ್ಟ ಇಲಾಖೆಯವರು. ಕೆಲವರು ಪ್ರೀತಿಯಲ್ಲಿ ಟೀಕೆ ಮಾಡಿದ್ರು, ಇವರು ಹಾಗೆ ಟೀಕೆ ಮಾಡಿಲ್ಲ. ನಿಮಗೆ ನಾನು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆಯೇ ಎಂದು ಅವರು ಹೇಳಿದರು.

ಧರ್ಮಸ್ಥಳ ಬೇರೆ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ನೋಡಿದ್ದೀರಿ. ಯಾಕೆ ಇಷ್ಟು ದ್ವೇಷ ನನ್ನ ಮೇಲೆ ಇದೆ ಅಂತ ನನಗೆ ಗೊತ್ತಾಗಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ, ಎತ್ತರದ ಬೆಟ್ಟದಿಂದ ನೀರು ಹರಿದಿದೆ. ನಮ್ಮ ಮೇಲೆ ದೃಢವಾದ ನಂಬಿಕೆ ಇಟ್ಟ ಎಲ್ಲರಿಗೂ ನಾನು ಆಭಾರಿ. ಈಗಾಗಲೇ ಲಕ್ಷಾಂತರ ಜನರು ಇಲ್ಲಿಗೆ ಬಂದು ಹೋಗಿದ್ದಾರೆ. ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಅಂತ ಹೇಳಿದ್ದಾರೆ. ಈ ಶತ್ರುತ್ವ ಯಾಕೆ ಅಂತ ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಅಂತ ಬೇಕು. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ ಎಂದು ಹೇಳಿದರು.

ಬೆಂಗಳೂರು ಅಥವ ಎಲ್ಲೋ ಕೂತು ಟೀಕೆ ಮಾಡೋರು ನಮಗೆ ಬೇಡ. ನಮಗೆ ನಮ್ಮವರು ಬೇಕು. ನಮ್ಮ ಜೊತೆ ನಿಲ್ಲುವವರು ಬೇಕು. ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲಾ ಹೆಣ್ಣುಮಕ್ಕಳಿಗೂ ನಾನು ಆಭಾರಿ. ಎಸ್‌ಐಟಿ ವರದಿ ಅರ್ಧ ಬಂದ ಕಾರಣ ನಾನು ಇಷ್ಟು ಧೈರ್ಯವಾಗಿ ಮಾತನಾಡುತ್ತಿದ್ದೇನೆ. ನಮ್ಮ ಹೊಳಪು ಹಾಗೇ ಉಳಿದಿದೆ, ಇದಕ್ಕೆ ನಾನು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ನೋಡಿಕೊಳ್ಳುತ್ತಾರೆ. ನಾವು ಸತ್ಯದಿಂದ ಇದ್ದೇವೆ, ಹಾಗೆಯೇ ಮುಂದೆಯೂ ಇರುತ್ತೇವೆ. ಮುಂದಿನ ದಿನಗಳು ಉತ್ತಮವಾಗಿರಲಿ, ಎಲ್ಲರಿಗೂ ಧನ್ಯವಾದಗಳು ಎಂದು ನುಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments