Thursday, December 25, 2025
Google search engine
Homeರಾಜ್ಯ10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ರಾಜ್ಯ ಸರ್ಕಾರ ತೀರ್ಮಾನ

10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ರಾಜ್ಯ ಸರ್ಕಾರ ತೀರ್ಮಾನ

ಮೈಸೂರು: ಮೆಕ್ಕೆಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400 ರೂ.ಗಳ ಎಂಎಸ್ ಪಿ ದರ ನಿಗದಿಯಾಗಿದ್ದು, ಇದುವರೆಗೆ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ. ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಮೆಕ್ಕೆ ಜೋಳದ ಖರೀದಿ ಬಗ್ಗೆ ಸಂಬಂಧಪಟ್ಟ ಸಚಿವರು , ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು.

ಮೆಕ್ಕೆ ಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿಯೇ ಹೇರಳವಾಗಿ ಮೆಕ್ಕೆಜೋಳವನ್ನು ಬೆಳೆದಿದ್ದು, ಅದನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಪತ್ರಮುಖೇನ ಕೋರಲಾಗುವುದು ಎಂದರು.

ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳದ ಬೆಲೆ ಕುಸಿತ ಕಂಡಿದ್ದು, ಉತ್ಪಾದನೆ ಹೆಚ್ಚಾಗಿದೆ. ಸುಮಾರು 55 ಲಕ್ಷ ಮೆಟ್ರಿಕ್ ಟನ್ ನಷ್ಟು ಮೆಕ್ಕೆಜೋಳವನ್ನು ರೈತರು ಬೆಳೆಯಬಹುದೆಂಬ ಅಂದಾಜಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮೆಕ್ಕೆ ಜೋಳ ಉತ್ಪತ್ತಿಯಲ್ಲಿ ಏರಿಕೆ ಕಂಡಿದ್ದರೂ ಸಹ , ಕೇಂದ್ರ ಸರ್ಕಾರ ಸುಮಾರು 70 ಲಕ್ಷ ಮೆ.ಟನ್ ನಷ್ಟು ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ನೋಡಲೆ ಏಜೆನ್ಸಿಗಳಾದ ನಫೆಡ್, ಎನ್ ಸಿ ಸಿಎಫ್ ಸಂಸ್ಥೆಗಳು ಮೆಕ್ಕೆ ಜೋಳ ಖರೀದಿ ಪ್ರಕ್ರಿಯೆ ನಡೆಸದೇ ಇರುವುದರಿಂದ, ರೈತರು ಕೆಲವಡೆ ಧರಣಿ ನಡೆಸುತ್ತಿದ್ದಾರೆ ಎಂದರು.

ಮೆಕ್ಕೆಜೋಳ ಖರೀದಿಗೆ ಡಿಸ್ಟಲರಿಗಳೊಂದಿಗೆ ಚರ್ಚೆ

ಡಿಸ್ಟಿಲರಿಗಳು ಮೆಕ್ಕೆ ಜೋಳ ಬೆಲೆ ಕಡಿಮೆ ಇದ್ದಾಗಲೇ ಹಿಂದೆಯೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಮೆಕ್ಕೆಜೋಳವನ್ನು ನಿಯಮಾಸುಸಾರ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸಲು ಡಿಸ್ಟಲರಿ ಮಾಲೀಕರೊಂದಿಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ

ಮೆಕ್ಕೆ ಜೋಳದ ಜೊತೆಗೆ ಹೆಸರು ಕಾಳು ಬೆಳೆ ಸಮಸ್ಯೆ ಬಗ್ಗೆ ಚರ್ಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಫ್ ಎ ಕ್ಯು ಬದಲಾವಣೆಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸುವ ಜೊತೆಗೆ ಸಂಬಂಧಪಟ್ಟವರ ತಂಡ ಈ ಬಗ್ಗೆ ದೆಹಲಿಗೂ ಭೇಟಿ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇತ್ತೀಚೆಗೆ ಪ್ರಧಾನಿಯವರನ್ನು ಭೇಟಿಯಾಗಿ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಕೋರಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 15.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರಾಜ್ಯದ ಮನವಿಗೆ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments