Sunday, August 16, 2026
Google search engine
Homeರಾಜ್ಯವೈಕುಂಠ ಏಕಾದಶಿಗೆ ಬೆಂಗಳೂರಿನ ತಿರುಪತಿ ದೇವಸ್ಥಾನದಲ್ಲಿ ವಿಶೇಷ ದರ್ಶನಕ್ಕೆ ಭರ್ಜರಿ ಸಿದ್ಧತೆ!

ವೈಕುಂಠ ಏಕಾದಶಿಗೆ ಬೆಂಗಳೂರಿನ ತಿರುಪತಿ ದೇವಸ್ಥಾನದಲ್ಲಿ ವಿಶೇಷ ದರ್ಶನಕ್ಕೆ ಭರ್ಜರಿ ಸಿದ್ಧತೆ!

ಬೆಂಗಳೂರು: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿಸೆಂಬರ್ 30ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಸ್ಥಳೀಯ ದೇವಸ್ಥಾನದ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದ ಟಿಟಿಡಿ ಬೆಂಗಳೂರು ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಕೆ. ವೀರಾಂಜನೇಯಲು ಈ ಬಗ್ಗೆ ಮಾತನಾಡಿ, “ವೈಕುಂಠ ಏಕಾದಶಿಯಂದು ಭಕ್ತರಿಗೆ ಸುಗಮ ಮತ್ತು ಅನುಕೂಲಕರ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಸಮಿತಿಯು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಂದು ಬೆಳಗಿನ ಜಾವ 1.35 ರಿಂದ ರಾತ್ರಿ 11.45 ರ ವರೆಗೆ ನಿರಂತರ ದರ್ಶನಕ್ಕೆ ಅವಕಾಶವಿರುತ್ತದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸರತಿ ಸಾಲಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಪವಿತ್ರ ದಿನದಂದು ಆಗಮಿಸುವ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿನಿಯೋಗವಿರುತ್ತದೆ” ಎಂದರು.

ದೇವಸ್ಥಾನದ ಆವರಣದಲ್ಲಿ ಬೆಳಗಿನ ಜಾವ 2.00 ಗಂಟೆಯಿಂದ ಶ್ರೀವಾರಿ ಲಡ್ಡು ಪ್ರಸಾದ ಮಾರಾಟವನ್ನು (ಪ್ರತಿ ಲಡ್ಡುವಿಗೆ ರೂ. 50/-) ಆಯೋಜಿಸಲಾಗಿದ್ದು, ದಾಸ್ತಾನು ಇರುವವರೆಗೂ ಇದು ಲಭ್ಯವಿರುತ್ತದೆ. ಭಕ್ತರ ಅನುಕೂಲಕ್ಕಾಗಿ 2026ರ ಟಿಟಿಡಿ ಡೈರಿಗಳು, ಕ್ಯಾಲೆಂಡರ್‌ಗಳು, ಅಗರಬತ್ತಿ ಮತ್ತು ಇತರೆ ಟಿಟಿಡಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಸಹ ತೆರೆಯಲಾಗುವುದು. ಈ ಬಾರಿ 70 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದು ಅವರು ಮಾಹಿತಿ ನೀಡಿದರು.

ತ್ವರಿತ ದರ್ಶನಕ್ಕೂ ವ್ಯವಸ್ಥೆ

ಭಕ್ತರಿಗಾಗಿ, ಕ್ಯೂ ಲೈನ್‌ಗಳು 16 ನೇ ಕ್ರಾಸ್, ಚೌಡಾಯ್ಯ ಸ್ಮಾರಕ ಸಭಾಂಗಣದಿಂದ ಮತ್ತು 2 ನೇ ಮುಖ್ಯ ರಸ್ತೆಯಿಂದ ಪ್ರಾರಂಭವಾಗುತ್ತವೆ. ಸ್ವಯಂಸೇವಕರ ಸಹಾಯದಿಂದ ವೃದ್ಧರು ಮತ್ತು ಅಂಗವಿಕಲರಿಗೆ ಆರಾಮದಾಯಕ ದರ್ಶನಕ್ಕೆ ವ್ಯವಸ್ಥೆ ಮಾಡುತ್ತೇವೆ, ಅವರಿಗೆ ವಿಶೇಷ ಸ್ಥಳದಲ್ಲಿ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ.

ತ್ವರಿತವಾಗಿ ಹೋಗಿ ದರ್ಶನ ಪಡೆಯಬೇಕಾದವರಿಗೆ ನಾವು ತ್ವರಿತ ದರ್ಶನ ವ್ಯವಸ್ಥೆ ಮಾಡುತ್ತಿದ್ದೇವೆ, ಅವರು 200 ಪಾವತಿಸಿ ತ್ವರಿತ ದರ್ಶನ ಪಡೆಯವ ವ್ಯವಸ್ಥೆ ಮಾಡಲಾಗಿದೆ.

ತಿರುಮಲದ ಸಿದ್ಧತೆಗಳ ಕುರಿತು ಮಾತನಾಡಿದ ಟಿಟಿಡಿ ಮಂಡಳಿ ಸದಸ್ಯ ಎಸ್. ನರೇಶ್ ಕುಮಾರ್ ಮಾತನಾಡಿ, “ತಿರುಮಲದಲ್ಲಿಯೂ ವೈಕುಂಠ ಏಕಾದಶಿಯ ಪ್ರಯುಕ್ತ ಬೃಹತ್ ಮಟ್ಟದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಾರಿ ವೈಕುಂಠ ದ್ವಾರದ ಮೂಲಕ ಪ್ರತಿದಿನ ಸುಮಾರು 80,000 ಕ್ಕೂ ಹೆಚ್ಚು ಭಕ್ತರಿಗೆ ದರ್ಶನ ಭಾಗ್ಯವನ್ನು ಕಲ್ಪಿಸಲು ಟಿಟಿಡಿ ಆಡಳಿತ ಮಂಡಳಿ ಯೋಜಿಸಿದೆ. ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಕಾಯುವ ಸಮಯದಲ್ಲಿ ಅನ್ನಪ್ರಸಾದ ಮತ್ತು ಪಾನೀಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಭಕ್ತರ ಸುರಕ್ಷತೆ ಮತ್ತು ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದರು.

ಸಾಂಸ್ಕೃತಿಕ ಕಾರ್ಯಕ್ರಮಗಳು:

ಈ ಪವಿತ್ರ ಸಂದರ್ಭವನ್ನು ಗುರುತಿಸಲು ಬೆಂಗಳೂರಿನ ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್ (HDPP) ವತಿಯಿಂದ ದಿನವಿಡೀ ದೇವಸ್ಥಾನದ ಆವರಣದಲ್ಲಿ ಭಕ್ತಿ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಸಮಸ್ತ ಭಕ್ತಾದಿಗಳು ಈ ವೈಕುಂಠ ಏಕಾದಶಿ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ವೆಂಕಟೇಶ್ವರ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಟಿಟಿಡಿ ಅಧಿಕಾರಿಗಳು ಕೋರಿದ್ದಾರೆ. ಟಿಟಿಡಿ ಬೆಂಗಳೂರು ವ್ಯವಸ್ಥಾಪಕಿ ಜಯಂತಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments