ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ಮಾಡಲು ನೀಡಲಾಗಿದ್ದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಅವರಿಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಬೆಂಗಳೂರಿನ ಸೆಷನ್ಸ್ ಕೋರ್ಟ್ ಅನುಮತಿ ನೀಡಿತ್ತು.
ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಕಾರಾಗೃಹ ಇಲಾಖೆ ಅಧಿಕಾರಿಗಳು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು, ಮೇಲ್ಮನವಿ ಪರಿಶೀಲಿಸಿದ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಎಲ್ಲರಿಗೂ ಒಂದೇ ಕಾನೂನು ಎಂದು ಹೇಳಿದೆ.
ಸೆಷನ್ಸ್ ಕೋರ್ಟ್ ವಾರಕ್ಕೊಮ್ಮೆ ಮನೆಯೂಟಕ್ಕೆ ಅನುಮತಿ ನೀಡಿದೆ. ಇದರಿಂದ ಇತರೆ ಆರೋಪಿಗಳು ಮನೆಯೂಟಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ . ಕೊಲೆ ಪ್ರಕರಣದ ಆರೋಪಿಗಳಿಗೆ ಮನೆಯೂಟ ಸೌಲಭ್ಯ ನೀಡುವುದು ಜೈಲು ನಿಯಮಗಳಿಗೆ ವಿರುದ್ಧ ಎಂದು ಇಲಾಖೆ ವಾದಿಸಿದೆ.
ಪರಪ್ಪನ ಅಗ್ರಹಾರ ಜೈಲಿನ ಊಟಕ್ಕೆ FSSAI4 ಸ್ಟಾರ್ ರೇಟಿಂಗ್ ನೀಡಿದೆ. ಜೈಲಿನ ಊಟದ ಗುಣಮಟ್ಟದ ಬಗ್ಗೆ ಯಾರೂ ಆಕ್ಷೇಪ ಎತ್ತಿಲ್ಲ. ಹೀಗಾಗಿ ಹೈಕೋರ್ಟ್ ಮೇಲ್ಮನವಿಯನ್ನು ಪರಿಗಣಿಸಿ ಸೆಷನ್ಸ್ ಕೋರ್ಟ್ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಪ್ರಕರಣದ ತನಿಖೆ ನಡೆಸಿರುವ ನಗರದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಮೂವರು ಆರೋಪಿಗಳು ಸಲ್ಲಿಸಿದ ಮನವಿ ಆಧರಿಸಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮೂವರು ಆರೋಪಿಗಳಿಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ 2026ರ ಜ.12ರಂದು ನಿರ್ದೇಶಿಸಿತ್ತು.



