Sunday, June 28, 2026
Google search engine
Homeರಾಜಕೀಯಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಡಿಕೆ ಸುರೇಶ್ ತಿರುಗೇಟು

ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಡಿಕೆ ಸುರೇಶ್ ತಿರುಗೇಟು

ಬೆಂಗಳೂರು: ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು ಎಂದು ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಬಾಲ ನಾಯಿಯನ್ನೇ ಅಲ್ಲಡಿಸಬಾರದು ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ಅವರು ಯಾರನ್ನು ಉಲ್ಲೇಖಿಸಿ ಈ ರೀತಿ ಹೇಳಿದ್ದಾರೆ ಎಂಬ ಮಾಹಿತಿ ಇಲ್ಲ. ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ. ನಿಯತ್ತಿನ ನಾಯಿಗಳು ಎಂದರು.

ಹಾಗಾದರೆ ಹೊರಗಡೆಯಿಂದ ಬಂದವರು ಬೀದಿ ನಾಯಿಗಳೇ ಎಂದು ಕೇಳಿದಾಗ, “ನಾನು ಹಾಗೆಂದು ಹೇಳಿಲ್ಲ. ಕಟ್ಟಾ ಕಾಂಗ್ರೆಸಿಗರು ಋಣ ತೀರಿಸುವ ವ್ಯಕ್ತಿತ್ವ ಹೊಂದಿರುವವರು. ಈ ನಾಯಿಗಳು ಬೀದಿ ನಾಯಿಗಳೇ ಆಗಿರಲಿ, ಸಾಕಿದ ನಾಯಿಗಳೇ ಆಗಿರಲಿ, ಯಜಮಾನನ ಋಣ ತೀರಿಸುತ್ತವೆಯೇ ಹೊರತು, ಬೇರೆ ರೀತಿ ಮಾಡುವುದಿಲ್ಲ. ಅದು ನಿಯತ್ತಿನ ನಾಯಿಗಳ ಸ್ವಭಾವ. ನಿಯತ್ತಿಗಾಗಿಯೇ ಜನ ನಾಯಿಗಳನ್ನು ಸಾಕುತ್ತಾರೆ. ಬೇರೆಯವರು ನಮ್ಮ ಋಣ ತೀರಿಸುತ್ತಾರೋ ಇಲ್ಲವೋ, ನಾಯಿ ನಮ್ಮ ಋಣ ತೀರಿಸುತ್ತದೆ ಎಂಬ ಕಾರಣಕ್ಕೆ ನಾಯಿ ಸಾಕುತ್ತಾರೆ. ಬೀದಿ ನಾಯಿಗೆ ಊಟ ಹಾಕುತ್ತಾರೆ. ನಾಯಿ ನಿಯತ್ತಿನ ಬಗ್ಗೆ ಅನೇಕ ಗಾದೆಗಳು, ನಾಣ್ನುಡಿಗಳಿವೆ” ಎಂದು ಸ್ಪಷ್ಟನೆ ನೀಡಿದರು.

ಶಾಸಕರ ವಿದೇಶ ಪ್ರವಾಸ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ

ಶಾಸಕರ ಪ್ರವಾಸದ ಬಗ್ಗೆ ಕೇಳಿದಾಗ, “ಅವರು ಶಾಸಕರಾಗಿರುವುದರಿಂದ ಅವರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ನೀವು ಶಾಸಕರಾಗಿ ನಿಮ್ಮನ್ನು ಕರೆದುಕೊಂಡು ಹೋಗುತ್ತಾರೆ. ನೀವು ಶಾಸಕರಾಗಲು ಪ್ರಯತ್ನಿಸಿ. ಕೆಲವರು ವಿಶ್ವಾಸಕ್ಕೆ ಹೋಗುತ್ತಾರೆ, ಮತ್ತೆ ಕೆಲವರು ದೇಶ ನೋಡಲು ಹೋಗುತ್ತಾರೆ, ಇನ್ನು ಕೆಲವರು ಅಧ್ಯಯನಕ್ಕಾಗಿ ಹೋಗುತ್ತಾರೆ. ಇಲ್ಲಿ ವ್ಯಾಖ್ಯಾನ ಮಾಡುವಂತದ್ದು ಇಲ್ಲ. ಆಗಾಗ್ಗೆ ಶಾಸಕರುಗಳು ವಿದೇಶಕ್ಕೆ ಹೋಗಿ ಬರುತ್ತಾರೆ. ಇದರಲ್ಲಿ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಕೆಲಸಗಳ ಒತ್ತಡ, ಗೊಂದಲಗಳ ಮಧ್ಯೆ ಕುಟುಂಬ ಹಾಗೂ ಸ್ನೇಹಿತರ ವಿದೇಶ ಪ್ರವಾಸ ಎಲ್ಲರಿಗೂ ನೆಮ್ಮದಿ ನೀಡುತ್ತದೆ” ಎಂದು ತಿಳಿಸಿದರು.

ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ಬಗ್ಗೆ ಕೇಳಿದಾಗ, ಪಂದ್ಯ ಚೆನ್ನಾಗಿತ್ತು, ಭಾರತ ಗೆದ್ದಿದೆ, ಇನ್ನು ಅನೇಕ ಪಂದ್ಯ ಗೆಲ್ಲಬೇಕಿದೆ. ಆರ್ ಎಸ್ಎಸ್ ನೋಂದಣಿಯಾಗಬೇಕು ಎಂಬ ಚರ್ಚೆ ಬಗ್ಗೆ ಕೇಳಿದಾಗ, “ನನಗೆ ಆ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

ನಂದಿನಿ ಉತ್ಪನ್ನ ಬಗ್ಗೆ ಅಪಪ್ರಚಾರ: ಸಭೆಯಲ್ಲಿ ತೀರ್ಮಾನ

ನಂದಿನಿ ಉತ್ಪನ್ನ ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ, “ನಂದಿನಿ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ನಂದಿನಿ ಉತ್ಪನ್ನಗಳನ್ನು ಮಾಡುವಾಗ ಯಾವುದೇ ರೀತಿಯ ಕಲಬೆರಕೆ ಮಾಡುವುದಿಲ್ಲ. ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುತ್ತಾರೆ. ಈ ಬಗ್ಗೆ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

ಖಾಸಗಿ ಕಂಪನಿಗಳು ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರಾ ಎಂದು ಕೇಳಿದಾಗ, “ಖಾಸಗಿಯವರು, ಬೇರೆಯವರು ಮಾಡಿಸುತ್ತಿರಬಹುದು. ನಾವು ಖಾಸಗಿಯವರ ಜತೆ ಸ್ಪರ್ಧೆ ಮಾಡಬೇಕಾದಾಗ ಅಪಪ್ರಚಾರ ಮಾಡುವುದು ಸಹಜ. ನಂದಿನಿ ಯಾವತ್ತೂ ಗುಣಮಟ್ಟದ ಜತೆ ರಾಜಿಯಾಗಿಲ್ಲ. ನಂದಿನಿಗೆ ಎಷ್ಟೇ ನಷ್ಟವಾದರೂ ಎಂದಿಗೂ ಗ್ರಾಹಕರಿಗೆ ಹಾಗೂ ರೈತರಿಗೆ ಅನ್ಯಾಯ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಗುಣಮಟ್ಟದ ಉತ್ಪನ್ನಗಳನ್ನು ಮುಂದೆಯೂ ನೀಡಲಿದೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments