ಬೆಂಗಳೂರು: ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ ಗಳ ಹಾವಳಿಗೆ ಸರ್ಕಾರಿ ನೌಕರರು ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದಲ್ಲಿ ಶನಿವಾರ ನಡೆದ ಅಭಯ ಹಸ್ತ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಅಭಯ ಹಸ್ತ" ಕಾರ್ಯಕ್ರಮವನ್ನು ಉದ್ಘಾಟಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶಗಳನ್ನು ವಿತರಿಸಿ, ಶುಭ ಹಾರೈಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಶಾಸಕ… pic.twitter.com/ThxCwNfZXQ
— Siddaramaiah (@siddaramaiah) February 21, 2026
ಎಲ್ಲ ವರ್ಗಾವಣೆಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಟಾಚಾರ ತಡೆಯಲು ಸಾಧ್ಯವಾಗುತ್ತಿದೆ. 5,700 ಹುದ್ದೆಗಳನ್ನು ವೈದ್ಯರು ಸೇರಿದಂತೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರೋಗ ತಡೆಗಟ್ಟಲು ಹೆಚ್ಚಿನ ಆದ್ಯತೆ ನೀಡಬೇಕು: ವೈದ್ಯಕೀಯೇತರ ಸಿಬ್ಬಂದಿಯೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಇಲಾಖೆಯ ಕೆಲಸ ಕಾರ್ಯಗಳಲ್ಲಿ ಜಾತಿ, ಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ರೋಗಿಗಳಿಗೆ ಚಿಕಿತ್ಸೆಯ ಸಂದರ್ಭದಲ್ಲಿ ಬೇಕಾಗುವ ರಕ್ತವನ್ನು ಪಡೆಯಲು ಯಾವುದೇ ಜಾತಿ, ಧರ್ಮಗಳನ್ನು ಪರಿಗಣಿಸುವುದಿಲ್ಲ. ಆದರೆ ಜನರು ಗುಣಮುಖರಾದ ತಕ್ಷಣ ಪುನಃ ಜಾತಿ, ಧರ್ಮಗಳ ಸುಳಿಯಲ್ಲಿ ಬೀಳುತ್ತಾರೆ. ರೋಗ ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಆರೋಗ್ಯ ಇಲಾಖೆ ಕಾರ್ಯತತ್ಪರರಾಗಬೇಕು. ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಸರ್ಕಾರದಿಂದ ಕಾರ್ಯಗತಗೊಳಿಸಲಾಗುತ್ತಿದೆ ಎಂದರು.
ಇಂದು 1,000 ಜನರು ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆ ಆಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯವನ್ನು ಒಳಗೊಂಡಿದೆ ಎಂದು ಸಿಎಂ ತಿಳಿಸಿದರು.
ಹಂತ, ಹಂತವಾಗಿ ಖಾಲಿ ಹುದ್ದೆಗಳ ಭರ್ತಿ
ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ಖಾಲಿ ಹುದ್ದೆಗಳನ್ನು ಹಂತ, ಹಂತವಾಗಿ ಭರ್ತಿ ಮಾಡಲಾಗುತ್ತಿದೆ. ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತ್ಯಂತ ಅವಶ್ಯಕವಾಗಿದೆ. ಇಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತದೆ. 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿವೆ. ಇವುಗಳನ್ನು ಹಂತ, ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ಹೇಳಿದರು.


