ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ರಾಜ್ಯಸಭೆಗೆ ಪ್ರವೇಶಿಸುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.
ಮುಂಬರುವ ರಾಜ್ಯಸಭಾ ಚುನಾವಣೆಗೆ ನಿತೀಶ್ ಕುಮಾರ್ ಸ್ಪರ್ಧಿಸುವ ಮೂಲಕ ದಶಕಗಳ ರಾಜ್ಯ ರಾಜಕೀಯದಿಂದ ರಾಷ್ಟ್ರೀಯ ರಾಜಕಾರಣಕ್ಕೆ ಕಾಲಿಡುತ್ತಿದ್ದಾರೆ. ಇದೇ ವೇಳೆ ಮಗ ನಿಶಾಂತ್ ಕುಮಾರ್ ಅವರಿಗೆ ಡಿಸಿಎಂ ಪಟ್ಟ ನೀಡುವ ಜೊತೆಗೆ ಬಿಜೆಪಿಗೆ ಅಧಿಕಾರ ಬಿಟ್ಟುಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಮಾಧ್ಯಮ ವರದಿಗಳು ಸೂಚಿಸಿದ್ದವು. ಆದರೆ, ಜನತಾದಳ ಯುನೈಟೆಡ್ನಿಂದ ಅವರ ಉಮೇದುವಾರಿಕೆಗೆ ಸಂಬಂಧಿಸಿದ ದಾಖಲೆಗಳು ಇನ್ನೂ ಸಿದ್ಧವಾಗಿಲ್ಲ.
ನಿತೀಶ್ ಕುಮಾರ್ ಅನುಪಸ್ಥಿತಿಯಲ್ಲಿ ಬಿಹಾರದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನದೇ ಆದ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪಕ್ಷವು ಶೀಘ್ರದಲ್ಲೇ ಔಪಚಾರಿಕ ಘೋಷಣೆ ಮಾಡಲಿದೆ ಎಂದು ಜೆಡಿಯು ಹಿರಿಯ ನಾಯಕ ಮತ್ತು ಬಿಹಾರ ಸಚಿವ ಶ್ರವಣ್ ಕುಮಾರ್ ಹೇಳಿಕೆ ನೀಡುವ ಮೂಲಕ ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ರಾಜಕೀಯ ಪ್ರವೇಶಿಸುವುದನ್ನು ದೃಢಪಡಿಸಿದ್ದಾರೆ.
‘ಹೋಳಿ ಹಬ್ಬದ ಸಂದರ್ಭದಲ್ಲಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರ ಹೆಸರು ರಾಜ್ಯಾದ್ಯಂತ ಸ್ವಲ್ಪ ಸಮಯದಿಂದ ವ್ಯಾಪಕವಾಗಿ ಚರ್ಚೆಯಾಗುತ್ತಿದ್ದು, ಅವರು ಶೀಘ್ರದಲ್ಲೇ ಸಕ್ರಿಯ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎಂದು ನಾನು ಹಂಚಿಕೊಳ್ಳಲು ಬಯಸುತ್ತೇನೆ. ಆ ಮೂಲಕ ಅವರನ್ನು ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಲು ಪ್ರೋತ್ಸಾಹಿಸುತ್ತಿರುವ ಅನೇಕ ಯುವಕರ ಬಹುಕಾಲದ ಆಸೆ ಈಡೇರುತ್ತದೆ. ಅವರಿಗೆ ಉಜ್ವಲ ಭವಿಷ್ಯವನ್ನು ಹಾರೈಸುತ್ತೇನೆ ಎಂದು ಶ್ರವಣ್ ಕುಮಾರ್ ಹೇಳಿದ್ದಾರೆ.



