ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ ಇಂದೇ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
ವಿಧಾನಸೌಧದಲ್ಲಿ ಶನಿವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರ ಹೆಸರನ್ನು ಸಿದ್ದರಾಮಯ್ಯ ಸೂಚಿಸಿದರು. ಇದಕ್ಕೆ ಶಾಸಕರು ಒಪ್ಪಿಗೆ ಸೂಚಿಸಿದರು.
ಶನಿವಾರ ಸಂಜೆ 4 ಗಂಟೆಗೆ ಆರಂಭವಾಗಬೇಕಿದ್ದ ಶಾಸಕಾಂಗ ಪಕ್ಷದ ಸಭೆ ಸಿದ್ದರಾಮಯ್ಯ ತಡವಾಗಿ ಬಂದ ಕಾರಣ ಸುಮಾರು ಒಂದೂವರೆ ಗಂಟೆ ತಡವಾಗಿ ಸಭೆ ಆರಂಭವಾಯಿತು.
ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಹೈಕಮಾಂಡ್ ಗೆ ಒಪ್ಪಿಸುವ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಇದಕ್ಕೆ ಸಭೆಯಲ್ಲಿ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಸಭೆಯನ್ನು ಕೆಲವು ನಿಮಿಷಗಳ ಕಾಲ ಸ್ಥಗಿತಗೊಳಿಸಲಾಯಿತು.
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸಿದ್ದರಾಮಯ್ಯ ಜೊತೆ ಪ್ರತ್ಯೇಕ ಸಭೆ ನಡೆಸಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಈಗಲೇ ಮುಗಿಸಲು ಸಿದ್ದರಾಮಯ್ಯ ಅವರನ್ನು ಓಲೈಸಿದ್ದಾರೆ.
ನಂತರ ಪುನರಾರಂಭಗೊಂಡ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಯಿತು. ಈ ಮೂಲಕ 17 ವರ್ಷಗಳ ನಂತರ ಮೊದಲ ಬಾರಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕೆಳಗೆ ಇಳಿದಿದ್ದಾರೆ.



