ಬೆಂಗಳೂರು: ವಿಧಾನ ಪರಿಷತ್ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಐದನೇ ಅಭ್ಯರ್ಥಿ ನಾಳೆ ಪ್ರಕಟಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
ಮುಖ್ಯಮಂತ್ರಿಗಳಾಗಿ ಮೊದಲ ದಿನದ ಅನುಭವ ಹೇಗಿತ್ತು ಎಂದು ಕೇಳಿದಾಗ, “ನಾನು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ನನ್ನ ನೇತೃತ್ವದಲ್ಲಿ ಘೋಷಿಸಿದ ಭರವಸೆಗಳನ್ನು ಜನರಿಗೆ ಈಡೇರಿಸಿದ್ದೇವೆ. ರಾಜ್ಯದ ಜನ ನನ್ನ ಮೇಲೆ ಅಪಾರ ವಿಶ್ವಾಸ ಇಟ್ಟಿದ್ದು, ಮೊದಲ ದಿನದಿಂದ ನಿರೀಕ್ಷೆಗಳಿವೆ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನನ್ನನ್ನು ಪ್ರಶ್ನೆ ಮಾಡಿದಾಗ, ನನ್ನ ಶಾಸಕರ ಸಂಖ್ಯಾಬಲ 136 ಎಂದು ಹೇಳಿದ್ದೆ” ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರಿಂದ ನಾಮಪತ್ರ ಸಲ್ಲಿಕೆ
“ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ನಾಳೆ ಖರ್ಗೆ ಅವರ ನಾಮಪತ್ರ ಸಲ್ಲಿಕೆ ನಂತರ ಇತರೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ” ಎಂದು ಮಾಹಿತಿ ನೀಡಿದರು.
ಹರಿಪ್ರಸಾದ್ ಅವರಿಗೆ ಅಪಾರ ಅನುಭವ
ಈಗ ಕಾಂಗ್ರೆಸ್ ಪಕ್ಷದಲ್ಲಿ ಡಿಕೆ ಹಾಗೂ ಬಿಕೆ ಜೋಡಿ ನೇತೃತ್ವವಿದೆ ಎಂದು ಕೇಳಿದಾಗ, “ಅವರು ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ನಾಯಕರು, ಕಾರ್ಯಕರ್ತರು. ನಾಲ್ಕು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ವಿಧಾನ ಪರಿಷತ್ ಸದಸ್ಯರಾಗಿದ್ದು, ನಾಳೆ ಕೂಡ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿದ್ದು, ಅಪಾರ ಅನುಭವ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡಿದೆ. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಕರ್ತವ್ಯ. ನಮ್ಮ ಆಡಳಿತವನ್ನು ರಾಜ್ಯದ ಜನ ಗೌರವಿಸಿ, ಬೆಂಬಲಿಸುವ ವಿಶ್ವಾಸವಿದೆ. ಉತ್ತಮ ಆಡಳಿತ ನೀಡುವುದು ನಮ್ಮ ಗುರಿ.
ಹೊರ ರಾಜ್ಯದವರಿಗಿಲ್ಲ ಉಚಿತ ಬಸ್ ಪಾಸ್
ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆ ಬಗ್ಗೆ ಕೇಳಿದಾಗ, “ನಾವು ನಮ್ಮ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುತ್ತಿದ್ದು, ಹೊರಗಿನವರಿಗೆ ಹೇಗೆ ಉಚಿತ ಬಸ್ ಪಾಸ್ ನೀಡಲು ಸಾಧ್ಯ? ನಮ್ಮ ಯೋಜನೆಗಳು ಕೇವಲ ಕನ್ನಡಿಗರಿಗೆ ಮಾತ್ರ. ಬೇರೆ ರಾಜ್ಯದವರಿಗೆ ನೀಡಲು ಆಗುವುದಿಲ್ಲ. ನೀವು ಕೇವಲ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದೀರಿ ಎಂದು ಬಾಲಕ ವಿದ್ಯಾರ್ಥಿಗಳು ಪ್ರಶ್ನೆ ಮಾಡುತ್ತಿದ್ದರು. ಈಗ ಒಂದನೇ ತರಗತಿಯಿಂದ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡಲಾಗುವುದು.
ರಾಹುಲ್ ಗಾಂಧಿ ಅವರು ಆಗಮಿಸುತ್ತಿರುವುದರಿಂದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮಾಡಲಾಗುವುದೇ ಎಂದು ಕೇಳಿದಾಗ, “ಈ ಕಾರ್ಯಕ್ರಮವನ್ನು ಬೇರೊಂದು ದಿನ ನಿಗದಿ ಮಾಡಲಾಗುವುದು. ಸಮಯದ ಕೊರತೆಯಿಂದ ನಾವು ಈ ಹಿಂದೆ ನಿಗದಿ ಮಾಡಿದ ಕಾರ್ಯಕ್ರಮ ಮುಂದೂಡಿದ್ದೇವೆ.
ಮಾಜಿ ಮುಖ್ಯಮಂತ್ರಿಗಳು ಗಣ್ಯರ ಪ್ರತಿಮೆಗೆ ಗೌರವ
ಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧ ಆವರಣದಲ್ಲಿರುವ ಸುಭಾಷ್ ಚಂದ್ರ ಬೋಸ್, ಲಾಲ್ ಬಹಾದ್ದೂರ್ ಶಾಸ್ತ್ರಿ, ಬಾಬು ಜಗಜೀವನ್ ರಾಮ್, ಕನಕದಾಸರು, ಕೆಂಗಲ್ ಹನುಮಂತಯ್ಯ, ದೇವರಾಜ ಅರಸು, ತಾಯಿ ಭುವನೇಶ್ವರಿ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು.
ಭಾನುವಾರ ಕನಕಪುರಕ್ಕೆ ಭೇಟಿ ಮಾಡುವೆ
“ನಾನು ಭಾನುವಾರ ಕನಕಪುರಕ್ಕೆ ಆಗಮಿಸುತ್ತಿದ್ದು, ಬೆಳಗ್ಗೆಯಿಂದ ರಾತ್ರಿವರೆಗೂ 20 ಕಡೆಗಳಿಗೆ ಭೇಟಿ ನೀಡುತ್ತೇನೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಜನರನ್ನು ಅಲ್ಲೇ ಭೇಟಿ ಮಾಡುವೆ. ಅಲ್ಲಿಂದ ಅನೇಕರು ಬಂದು ಇಲ್ಲಿ ಕಾಯುವುದು ಬೇಡ. ನಾನೇ ನಿಮ್ಮನ್ನು ಭೇಟಿ ಮಾಡಲು ಬರುತ್ತೇನೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಾನು ಯಾರನ್ನು ಭೇಟಿ ಮಾಡಲು ಆಗುವುದಿಲ್ಲ. 2 ದಿನ ಕಾಲಾವಕಾಶ ನೀಡಿ. ನನಗೆ ಸಹಕಾರ ನೀಡಿ ಎಂದು ನನ್ನ ಜಿಲ್ಲೆಯ ಜನರಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.



