ನವದೆಹಲಿ: ರಾಜ್ಯಸಭಾ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಖಾತೆ ಸಚಿವ ಜಾರ್ಜ್ ಕುರಿಯನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕುರಿಯನ್ ಅವರಿಗೆ ಮತ್ತೆ ಅವಕಾಶ ನೀಡದಿರಲು ಬಿಜೆಪಿ ನಿರ್ಧರಿಸಿತ್ತು. ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ರಾಜ್ಯ ಖಾತೆ ಸಚಿವರಾಗಿಯೂ ಜವಾಬ್ದಾರಿ ಹೊಂದಿದ್ದ ಕುರಿಯನ್ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕುರಿಯನ್ ನೀಡಿದ ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ಮುರ್ಮು ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಜಾರ್ಜ್ ಕುರಿಯನ್ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಏಕೈಕ ಸಚಿವರಾಗಿದ್ದರು. ಕುರಿಯನ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಜೂನ್ 21ರಂದು (ಭಾನುವಾರ) ಕೊನೆಗೊಂಡಿತ್ತು.
ಕೇಂದ್ರ ಸಚಿವರಾದ ರವನೀತ್ ಸಿಂಗ್ ಬಿಟ್ಟು ಮತ್ತು ಜಾರ್ಜ್ ಕುರಿಯನ್ ಅವರ ಅಧಿಕಾರಾವಧಿ ಮುಕ್ತಾಯ ಹಂತದಲ್ಲಿದ್ದರೂ, ಜೂನ್ 18ರಂದು ನಡೆದ ರಾಜ್ಯಸಭಾ ಚುನಾವಣೆಗೆ ಈ ಇಬ್ಬರಿಗೂ ಬಿಜೆಪಿ ಟಿಕೆಟ್ ನಿರಾಕರಿಸಿತ್ತು.
65 ವರ್ಷದ ಕುರಿಯನ್ 1980ರಲ್ಲಿ ಬಿಜೆಪಿ ಸ್ಥಾಪನೆಯಾದಾಗಿನಿಂದಲೂ ಪಕ್ಷದ ಸದಸ್ಯರಾಗಿದ್ದಾರೆ. ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ, ಯುವ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಮತ್ತು ಬಿಜೆಪಿಯ ಕೇರಳ ಘಟಕದ ಉಪಾಧ್ಯಕ್ಷರಾಗಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
ಕುರಿಯನ್ ಸುಪ್ರೀಂ ಕೋರ್ಟ್ನಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದಾರೆ. 2024ರ ಜೂನ್ 9ರಂದು ಕೇಂದ್ರದಲ್ಲಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದಕ್ಕೂ ಮುನ್ನ, ಕುರಿಯನ್ ಅವರು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷರಾಗಿದ್ದರು.



