ಬೆಂಗಳೂರು: ಅಮಾವಾಸ್ಯೆಯ ಮುನ್ನ ನಂತರದ ಕತ್ತಲೆಯ ದಿನಗಳಲ್ಲಿ ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ, ಕೈಗಳಿಗೆ ಗ್ಲೌಸ್ ಹಾಕಿಕೊಂಡು ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗ್ ನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಗ್ಯಾಂಗ್ ನಲ್ಲಿದ್ದ ಪುರುಷೋತ್ತಮ, ಚಂದ್ರು, ದರ್ಶನ್, ಸೌಭಾಗ್ಯ ಬಂಧಿತ ಆರೋಪಿಗಳಾಗಿದ್ದು,ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜು ತಿಳಿಸಿದ್ದಾರೆ.
ಆರೋಪಿಗಳು ಕೂಡ್ಲೂ ಗೇಟ್ ಬಳಿ ಬಾಡಿಗೆ ಮನೆ ಮಾಡಿಕೊಂಡು ಒಂದೇ ರೂಮಿನಲ್ಲಿದ್ದುಕೊಂಡು ವಿವಿಧ ಕೆಲಸಗಳಿಗೆ ಹೋಗುತ್ತಾ ರಾತ್ರಿ ವೇಳೆ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದರು. ಈ ಮೂವರು ಆರೋಪಿಗಳಿಗೆ ಸೌಭಾಗ್ಯ ಪರೋಕ್ಷವಾಗಿ ಸಾಥ್ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
ದಾವಣಗೆರೆ, ಕೊಪ್ಪಳ, ತುಮಕೂರು ಸೇರಿದಂತೆ ಐದಾರು ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಇವರ ಮೇಲೆ ಪ್ರಕರಣಗಳು ದಾಖಲಾಗಿವೆ. ಇವುಗಳಿಗೆ ಯಾವುದಕ್ಕೂ ಕ್ಯಾರೇ ಎನ್ನದೇ ತುಮಕೂರಿನಲ್ಲಿ ಕಳ್ಳತನ ಪ್ರಕರಣಗಳಲ್ಲಿ ಬಂಧನವಾಗಿ, ಜೈಲಿನಿಂದ ಬಿಡುಗಡೆಯಾದ ನಂತರ ಕಳ್ಳತನ ಮಾಡಿದ್ದ ಸುಮಾರು 12 ಲಕ್ಷ ಹಣವನ್ನು ಬರೀ ಮೋಜುಮಸ್ತಿಗೆ ಖರ್ಚು ಮಾಡಿದ್ದರು. ಹಣ ಖರ್ಚಾದ ಕೂಡಲೇ ದೊಡ್ಡಬಳ್ಳಾಪುರಕ್ಕೆ ಎಂಟ್ರಿ ಕೊಟ್ಟಿದ್ದರು.
ಕಳೆದ ಸೆ.16ರ ಮಧ್ಯರಾತ್ರಿ ದೊಡ್ಡಬಳ್ಳಾಪುರ ತಾಲೂಕಿನ ನಿಜಗಲ್ ಲೇಔಟ್, ನಂದಿನಿ ಲೇಔಟ್, ಟಿ.ಬಿ ನಾರಾಯಣಪ್ಪ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮನೆ ಕಳ್ಳತನಕ್ಕೆ ಇಳಿದಿದ್ದರು. ಈ ಖದೀಮರು, ಟಿ.ಬಿ ನಾರಾಯಣಪ್ಪ ಬಡಾವಣೆಯಲ್ಲಿರುವ ಬಾಡಿಗೆ ಮನೆಯಲ್ಲಿ ಯಾರೂ ಇಲ್ಲದ್ದನ್ನು ಪತ್ತೆ ಹಚ್ಚಿ, ಆ ಮನೆಗೆ ನುಗ್ಗಿದ್ದರು.
ಸ್ಕ್ರೂ ಡ್ರೈವರ್ನಿಂದ ಮನೆಗೆ ಅಳವಡಿಸಿದ್ದ ಲಾಕ್ನ ಸ್ಕ್ರೂಗಳನ್ನು ಉದುರಿಸಿ ಮನೆ ಒಳಗೆ ಹೋಗಿ ಮನೆಯಲ್ಲಿನ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದರು. ಕಬೋರ್ಡ್ ಬೀಗವನ್ನು ಮುರಿದು ಒಳಗಿದ್ದ 32 ಗ್ರಾಂನ ನೆಕ್ಲೇಸ್, 15 ಗ್ರಾಂನ ಬ್ರಾಸ್ಲೈಟ್, 20 ಗ್ರಾಂನ 2 ಜೊತೆ ಜುಮುಕಿ, 1 ಗ್ರಾಂನ ತಾಳಿ, 11 ಗ್ರಾಂನ ಉಂಗುರ, 20 ಗ್ರಾಂನ ಫ್ಯಾನ್ಸಿ ಚೈನು, 10 ಗ್ರಾಂನ ಕತ್ತಿನ ಚೈನು, 4 ಗ್ರಾಂನ ಮಹಿಳೆಯ ಬ್ರಾಸ್ಲೈಟ್, ಬೆಳ್ಳಿಯ ಕಾಲು ಚೈನು ಒಂದು ಜೊತೆ, ಆ್ಯಪಲ್ ಏರ್ಪಾಡ್ಸ್ ಸೇರಿದಂತೆ ಒಟ್ಟು 115 ಗ್ರಾಂ ಚಿನ್ನದ ಒಡವೆಗಳನ್ನು ಕದ್ದು ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸರು, ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ತಂಡ ಸೆ.21ರಂದು ದೊಡ್ಡಬಳ್ಳಾಪುರ ತಾಲೂಕಿನ ರೈಲ್ವೆ ನಿಲ್ದಾಣ ಸಮೀಪದ ಸ್ಕೌಟ್ ಕ್ಯಾಂಪ್ ಬಳಿ ಕಳ್ಳರ ಜಾಡನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸುವವಲ್ಲಿ ತಂಡ ಯಶಸ್ವಿಯಾಗಿದೆ.
ಕಳ್ಳತನಕ್ಕೆ ರೈಲಿನಿಂದ ಬರುತ್ತಿದ್ದ ಗ್ಯಾಂಗ್ ರೈಲಿನಿಂದ ಇಳಿಯುತ್ತಿದ್ದಂತೆ ಮೊಬೈಲ್ಗಳನ್ನು ಇಂಟರ್ನೆಟ್ ಬಳಸದೇ, ಆಫ್ಲೈನ್ಗೆ ಹೋಗಿ ಮೂರಕ್ಕೂ ಹೆಚ್ಚು ಕಿಲೋ ಮೀಟರ್ ದೂರದಷ್ಟು ಟ್ರ್ಯಾಕ್ನಲ್ಲೇ ನಡೆದುಕೊಂಡು ಹೋಗುತ್ತಾರೆ. ಕಳ್ಳತನಕ್ಕೆ ಸ್ಕೆಚ್ ಹಾಕುತ್ತಾರೆ. ಕಳ್ಳತನ ಮಾಡುವ ಮನೆಯ ಬಳಿ ಚಪ್ಪಲಿ ಹಾಕಿಕೊಂಡು ಹೋಗುವುದಿಲ್ಲ. ಅಮಾವಾಸ್ಯೆ ಹಿಂದಿನ ದಿನ ಹಾಗೂ ಮುಂದಿನ ದಿನದಂದು ಕಪ್ಪುಬಟ್ಟೆ ಧರಿಸಿ ಕಳ್ಳತನಕ್ಕೆ ಇಳಿಯುತ್ತಾರೆ” ಎಂದು ತಿಳಿಸಿದ್ದಾರೆ.



