ನವದೆಹಲಿ: ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾಗಿ ಹಿರಿಯ ವಕೀಲರಾದ ವೆಂಕಿತಾ ಸುಬ್ರಮಣಿ ಮೋಹನ ಮತ್ತು ನಾಲ್ವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂಕೋರ್ಟ್ ನೇಮಕಾತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 37ಕ್ಕೆ ತಲುಪಿದೆ. ಇದು 38ರ ನವೀಕೃತ ಮಂಜೂರಾದ ಬಲಕ್ಕಿಂತ ಒಂದು ಕಡಿಮೆಯಾಗಿದೆ.
ಕೇಂದ್ರ ಕಾನೂನು ಸಚಿವಾಲಯದ ನ್ಯಾಯ ಇಲಾಖೆ ಹೊರಡಿಸಿದ ಪ್ರತ್ಯೇಕ ಅಧಿಸೂಚನೆಗಳ ಪ್ರಕಾರ, ಹಿರಿಯ ಸುಪ್ರೀಂ ಕೋರ್ಟ್ ವಕೀಲೆ ವೆಂಕಿತಾ ಸುಬ್ರಮಣಿ ಮೋಹನ, ಬಾಂಬೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಶ್ರೀ ಚಂದ್ರಶೇಖರ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಶೀಲ್ ನಾಗು, ಮಧ್ಯಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸಂಜೀವ್ ಸಚ್ದೇವ ಮತ್ತು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಅರುಣ್ ಪಲ್ಲಿ ಅವರನ್ನು ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ.
ತಮಿಳುನಾಡು ಮೂಲದ ವೆಂಕಿತಾ ಸುಬ್ರಮಣಿ ಮೋಹನ, ಸುಪ್ರೀಂ ಕೋರ್ಟ್ನಲ್ಲಿ ಅಭ್ಯಾಸ ಮಾಡುತ್ತಿರುವ ಎರಡನೇ ಮಹಿಳಾ ವಕೀಲೆಯಾಗಿದ್ದು, ನೇರವಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ. ನ್ಯಾಯಮೂರ್ತಿ ಮಲ್ಹೋತ್ರಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದ ಮೊದಲ ಮಹಿಳಾ ಹಿರಿಯ ವಕೀಲೆಯಾಗಿದ್ದಾರೆ.
ಈ ಕುರಿತು ಪೋಸ್ಟ್ ಮಾಡಿರುವ ಕಾನೂನು ಮತ್ತು ನ್ಯಾಯ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಭಾರತದ ಮುಖ್ಯ ನಾಯಮೂರ್ತಿಗಳ ಸಮಾಲೋಚನೆ ಬಳಿಕ ರಾಷ್ಟ್ರಪತಿಗಳು ಸರ್ವೋಚ್ಛ ನ್ಯಾಯಾಲಯಕ್ಕೆ ಐವರು ನ್ಯಾಯಮೂರ್ತಿಗಳ ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಭಾರತದ ಸಂವಿಧಾನದ 124ನೇ ವಿಧಿಯ (2) ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸುವಲ್ಲಿ, ರಾಷ್ಟ್ರಪತಿಗಳು, ಭಾರತದ ಮುಖ್ಯ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿದ ನಂತರ ಈ ಕೆಳಗಿನವರನ್ನು ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿದ್ದಾರೆ ಎಂದು ತಿಳಿಸಿರುವ ಸಚಿವರು, ಅವರ ಹೆಸರಿನ ಪಟ್ಟಿಯನ್ನು ಹಂಚಿಕೊಂಡಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ಸುಪ್ರೀಂ ಕೋರ್ಟ್ನ ಅನುಮೋದಿತ ನ್ಯಾಯಮೂರ್ತಿಗಳ ಸಂಖ್ಯೆಯನ್ನು 34ರಿಂದ 38 ಕ್ಕೆ ಹೆಚ್ಚಿಸಲು ಸರ್ಕಾರ ಕಳೆದ ತಿಂಗಳು ಕಾನೂನನ್ನು ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಯನ್ನು ಪ್ರಕಟಿಸಿತ್ತು.
ಆಯ್ಕೆ ಆಗಿರುವವರು ಯಾರು?:
ನ್ಯಾಯಮೂರ್ತಿ ಶೀಲ್ ನಾಗು 2011ರ ಮೇನಲ್ಲಿ ಮಧ್ಯಪ್ರದೇಶ ಹೈಕೋರ್ಟ್ನ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಜುಲೈ 2024ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ವಹಿಸಿಕೊಂಡರು.
ನ್ಯಾಯಮೂರ್ತಿ ಚಂದ್ರಶೇಖರ್ 2013ರಲ್ಲಿ ಜಾರ್ಖಂಡ್ ಹೈಕೋರ್ಟ್ನ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದರು. 2015ರ ಜನವರಿಯಲ್ಲಿ ಬಾಂಬೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ವಹಿಸಿಕೊಂಡರು. ನ್ಯಾಯಮೂರ್ತಿ ಸಚ್ದೇವ್ ಅವರು 2013ರ ಏಪ್ರಿಲ್ನಲ್ಲಿ ದೆಹಲಿ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಯಿತು. 205ರಲ್ಲಿ ಖಾಯಂ ನ್ಯಾಯಮೂರ್ತಿಗಳಾದರು. 2025ರಿಂದ ಅವರು, ಮಧ್ಯಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ಕೆಲಸ ಮಾಡುತ್ತಿದ್ದರು.
ನ್ಯಾಯಮೂರ್ತಿ ಪಲ್ಲಿ 2013 ಡಿಸೆಂಬರ್ನಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿತ್ತು. 2025ರ ಏಪ್ರಿಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು.
ಹಿರಿಯ ವಕೀಲೆ ವೆಂಕಿತಾ ಸುಬ್ರಮಣಿ ಮೋಹನ ಅವರು, ಸುಪ್ರೀಂ ಕೋರ್ಟ್ ಮುಂದೆ ಹಲವಾರು ಸಾಂವಿಧಾನಿಕ, ನಾಗರಿಕ ಮತ್ತು ಸೇವಾ ವಿಷಯಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.



