ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣ ಆಸ್ತಿಯು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದೇ ಹೊರತು ಮುಂಬೈನ ಇಸ್ಕಾನ್ ಗೆ ಸೇರಿದ್ದಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಎ.ಎಸ್. ಓಕಾ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು ಬೆಂಗಳೂರು ಇಸ್ಕಾನ್ ಸೊಸೈಟಿ ಪರ ತೀರ್ಪು ನೀಡಿದೆ.
ಬೆಂಗಳೂರು ಇಸ್ಕಾನ್ ಸೊಸೈಟಿ ಮುಂಬೈನ ಇಸ್ಕಾನ್ ಗೆ ಸೇರಿದ್ದು ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ಕರ್ನಾಟಕ ಹೈಕೋರ್ಟ್ 2011ರಲ್ಲಿ ‘ಇಸ್ಕಾನ್ ಮುಂಬೈ’ ಪರವಾಗಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಬೆಂಗಳೂರು ಇಸ್ಕಾನ್ ಸೊಸೈಟಿ ಪ್ರತಿನಿಧಿ ಕೋದಂಡರಾಮ ದಾಸ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಸ್ಥಳೀಯ ನ್ಯಾಯಾಲಯದ 2009 ರ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದರು.
ಈ ಹಿಂದೆ ವಿಚಾರಣಾ ನ್ಯಾಯಾಲಯವು ಬೆಂಗಳೂರು ಇಸ್ಕಾನ್ ಸೊಸೈಟಿ ಪರವಾಗಿ ತೀರ್ಪು ನೀಡಿತ್ತು. ಇಸ್ಕಾನ್ ಮುಂಬೈ ವಿರುದ್ಧ ಶಾಶ್ವತ ತಡೆಯಾಜ್ಞೆ ನೀಡಿತ್ತು. ಹೀಗಿದ್ದರೂ ತೀರ್ಪನ್ನು ರದ್ದುಗೊಳಿಸಿದ್ದ ಹೈಕೋರ್ಟ್, ದೇವಾಲಯದ ನಿಯಂತ್ರಣಾಧಿಕಾರವನ್ನು ಇಸ್ಕಾನ್ ಮುಂಬೈಗೆ ನೀಡಿತ್ತು.
ಕರ್ನಾಟಕದಲ್ಲಿ ನೋಂದಾಯಿತ ಬೆಂಗಳೂರು ಇಸ್ಕಾನ್ ಸೊಸೈಟಿಯು ದಶಕಗಳಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತ ಬೆಂಗಳೂರು ದೇವಾಲಯವನ್ನು ನಿರ್ವಹಿಸುತ್ತಿರು ವುದಾಗಿ ವಾದಿಸಿತ್ತು. ಇಸ್ಕಾನ್ ಬೆಂಗಳೂರು ತನ್ನ ಶಾಖೆಯಾಗಿದ್ದು ಅದರ ಆಸ್ತಿಯು ನ್ಯಾಯಸಮ್ಮತವಾಗಿ ತನ್ನ ವ್ಯಾಪ್ತಿಗೆ ಸೇರಿದೆ ಎಂದು ಇಸ್ಕಾನ್ ಮುಂಬೈ ಪ್ರತಿಪಾದಿಸಿತ್ತು.
ಏನಿದು ಪ್ರಕರಣ?
ಮುಂಬೈ ಇಸ್ಕಾನ್ ಸಂಸ್ಥೆಯು ಬೆಂಗಳೂರಿನ ಇಸ್ಕಾನ್ ದೇವಾಲಯ ತನ್ನ ಶಾಖೆಯ ಭಾಗವೆಂದು ಹೇಳಿಕೊಂಡಿತ್ತು. ಈ ಸಂಬಂಧ ಮೊದಲು ಸಿಟಿ ಸಿವಿಲ್ ಕೋರ್ಟ್ ಮೆಟ್ಟಿಲೇರಿತ್ತು. ಬೆಂಗಳೂರು ಇಸ್ಕಾನ್ ಸಂಸ್ಥೆಯ ಎಲ್ಲ ಆಸ್ತಿ ತನಗೆ ಸೇರಬೇಕು ಎಂದು ವಾದಿಸಿತ್ತು. ಆದರೆ ಬೆಂಗಳೂರು ಇಸ್ಕಾನ್ ಸಂಸ್ಥೆಯು ಇದು ಸ್ವತಂತ್ರ ಸಂಸ್ಥೆ ಅಂತ ವಾದಿಸುತಲೇ ಬಂದಿತ್ತು.
ಈ ಸಂಬಂಧ 2009ರಲ್ಲಿ ಸಿಟಿ ಸಿವಿಲ್ ಕೋರ್ಟ್ ಬೆಂಗಳೂರು ಇಸ್ಕಾನ್ ಸಂಸ್ಥೆ ಪರ ತೀರ್ಪು ನೀಡಿತ್ತು. 2009ರಲ್ಲಿ ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಕರ್ನಾಟಕ ಹೈಕೋರ್ಟ್ನಲ್ಲಿ ಮುಂಬೈ ಸಂಸ್ಥೆ ಮೇಲ್ಮನವಿ ಸಲ್ಲಿಸಿತ್ತು.



