ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಾಣೆ ಪ್ರಕರಣ ಸಂಬಂಧ ನಟಿ ಹಾ ಡಿಜಿಪಿ ರಾಮಚಂದ್ರರಾವ್ ಮಲಮಗಳು ರನ್ಯಾ ರಾವ್ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಜಾರಿ ನಿರ್ದೇಶನ(ಇಡಿ) ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕಳೆದ ಜುಲೈ 4ರಂದು ಇಡಿ ಹೊರಡಿಸಿದ್ದ ತಾತ್ಕಾಲಿಕ ಮುಟ್ಟುಗೋಲು ಆದೇಶ ಪ್ರಶ್ನಿಸಿ ರನ್ಯಾರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ನ್ಯಾಯಪೀಠ ಮಧ್ಯಂತರ ಆದೇಶ ನೀಡಿ ತಡೆ ನೀಡಿದೆ.
ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಾಗುವುದಕ್ಕೂ ಮುನ್ನ ಗಳಿಸಿರುವ ಆಸ್ತಿಗಳನ್ನು ಜಪ್ತಿ ಮಾಡಿಕೊಳ್ಳಲು ಅವಕಾಶವಿಲ್ಲ. ಆದ್ದರಿಂದ ಮುಂದಿನ ವಿಚಾರಣೆವರೆಗೂ ಜಾರಿ ನಿರ್ದೇಶನಾಲಯದ ಕ್ರಮಕ್ಕೆ ತಡೆ ನೀಡಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರ ವಿರುದ್ಧ ಪೂರ್ವ ನಿರ್ಧರಿತ ಅಪರಾಧ (ಕಳ್ಳಸಾಗಾಣೆ) ಪ್ರಕರಣ ದಾಖಲಾಗಿ ವರ್ಷವಾಗಿದೆ. ಚಿನ್ನ ಕಳ್ಳಸಾಗಾಣೆ ಆರೋಪ ಸಂಬಂಧ ಪ್ರಕರಣ ದಾಖಲಾಗುವುದಕ್ಕೂ ಮುನ್ನ ಗಳಿಸಿರುವ ಆಸ್ತಿಗಳನ್ನೂ ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದು ಪವನ್ ದಿಬ್ಬೂರು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಪ್ರಕರಣದ ವಿವರ:
ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರನ್ಯಾರಾವ್ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ವೇಳೆ, ರನ್ಯಾರಾವ್ ಬಳಿ 12.56 ಕೋಟಿ ರೂ. ಮೌಲ್ಯದ ಚಿನ್ನ ದೊರೆತಿತ್ತು. ಬಳಿಕ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ಮತ್ತು ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು.
ಇನ್ನು ಈ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್ಗೆ 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ ಐ) ಅಧಿಕಾರಿಗಳು ಇತ್ತೀಚೆಗಷ್ಟೇ ನೋಟಿಸ್ ರವಾನಿಸಿದ್ದರು. ಹಾಗೂ ಪ್ರಕರಣ ಇನ್ನುಳಿದ ಆರೋಪಿಗಳಾದ ತರುಣ್ ಕೊಂಡೂರು ರಾಜುಗೆ 62 ಕೋಟಿ ರೂ, ಸಾಹಿಲ್ ಜೈನ್ ಮತ್ತು ಭರತ್ ಜೈನ್ ಅವರಿಗೆ ತಲಾ 53 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ ಎಂದು ಡಿಆರ್ಐ ಮೂಲಗಳು ಮಾಹಿತಿ ನೀಡಿದ್ದವು.
ರನ್ಯಾ ರಾವ್ಗೆ ಸೇರಿದ ₹34.12 ಕೋಟಿ ಮೌಲ್ಯದ ಆಸ್ತಿ ಇಡಿ ವಶ: ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಜುಲೈ 4, 2025 ರಂದು ಮುಟ್ಟುಗೋಲು ಹಾಕಿಕೊಂಡಿತ್ತು. ರನ್ಯಾ ರಾವ್ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು ಜಾರಿ ಮಾಡಲಾಗಿದ್ದು, ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗದಂತಾಗಿದೆ



