ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದ್ದು, ಸಂಸದ ಸೇರಿದಂತೆ ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.
ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ಅಪಾಯದಿಂದ ಪಾರಾದ ಸಂಸದರು ಎಸ್ಕಾರ್ಟ್ ವಾಹನದಲ್ಲೇ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಯಾಣ ಮುಂದುವರಿಸಿದ್ದಾರೆ.



