ನವದೆಹಲಿ: ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಬಿಜೆಪಿ ನೋಟಿಸ್ ಸಲ್ಲಿಸಿದೆ, ಆದರೆ ಅವರ ವಿರುದ್ಧ ಯಾವುದೇ ಹಕ್ಕುಚ್ಯುತಿ ನಿರ್ಣಯ ಪ್ರಸ್ತಾಪ ಮಂಡಿಸಿಲ್ಲ.
ಭಾರತ ಮತ್ತು ಅಮೆರಿಕ ನಡುವಣ ವ್ಯಾಪಾರ ಒಪ್ಪಂದ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪ ಮಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅಮೆರಿಕಕ್ಕೆ ಭಾರತಮಾತೆಯನ್ನು ಮಾರಾಟ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಯುಎಸ್ ಜೊತೆಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದರು. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯನ್ನು ಉಲ್ಲೇಖಿಸಿದ ನಂತರ ಅವರನ್ನು ಮಾತನಾಡಲು ಬಿಡದೇ ಇರುವ ಬಗ್ಗೆ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದ್ದರು.
ಬಿಜೆಪಿ ಸಂಸದ ನಿಶಾಂತ್ ದುಬೆ, ಯಾವುದೇ ಆಧಾರ ಇಲ್ಲದೇ ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಅವರನ್ನು ಲೋಕಸಭಾ ಸ್ಥಾನದಿಂದ ವಜಾಗೊಳಿಸಬೇಕು ಎಂದು ನೋಟಿಸ್ ನೀಡಿದ್ದಾರೆ.
ಸ್ಪೀಕರ್ ಓಂಪ್ರಕಾಶ್ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆಗೆ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ ೯ರಂದು ಈ ವಿಷಯ ಚರ್ಚೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಬಿಜೆಪಿ ಸಂಸದರು, ರಾಹುಲ್ ಗಾಂಧಿ ಅವರ ಸದಸ್ಯತ್ವನ್ನು ರದ್ದುಗೊಳಿಸುವಂತೆ ಕೋರಿ ಹಂಗಾಮಿ ಸ್ಪೀಕರ್ ಗೆ ನೋಟಿಸ್ ಕಳುಹಿಸಿದ್ದಾರೆ.
ಜನವರಿ 28 ರಂದು ಪ್ರಾರಂಭವಾದ ಬಜೆಟ್ ಅಧಿವೇಶನವು 65 ದಿನಗಳಲ್ಲಿ 30 ಸಭೆಗಳನ್ನು ಒಳಗೊಂಡಿದೆ ಮತ್ತು ಏಪ್ರಿಲ್ 2 ರಂದು ಮುಕ್ತಾಯಗೊಳ್ಳುತ್ತದೆ. ಫೆಬ್ರವರಿ 13 ರಂದು ವಿರಾಮಕ್ಕಾಗಿ ಉಭಯ ಸದನಗಳು ಮುಂದೂಡಲ್ಪಡುತ್ತವೆ ಮತ್ತು ಮಾರ್ಚ್ 9 ರಂದು ಮತ್ತೆ ಸಭೆ ಸೇರುತ್ತವೆ, ಇದರಿಂದಾಗಿ ಸ್ಥಾಯಿ ಸಮಿತಿಗಳು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಅನುದಾನದ ಬೇಡಿಕೆಗಳನ್ನು ಪರಿಶೀಲಿಸಲು ಅನುವು ಮಾಡಿಕೊಡುತ್ತದೆ.



