ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ರಚಿಸಿರುವ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ಎಸ್ ಐಟಿ ತಂಡ ಇಂದಿನಿಂದ ತನಿಖೆ ಆರಂಭಿಸಲಿದೆ.
ವಿಶೇಷ ತನಿಖಾ ತಂಡ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ನಂತರ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ, ಧರ್ಮಸ್ಥಳ ಪೊಲೀಸ್ ಇನ್ಸ್ಪೆಕ್ಟರ್ ಜೊತೆ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ. ಬಳಿಕ ಅಧಿಕೃತವಾಗಿ ಪ್ರಕರಣ ಎಸ್ಐಟಿಗೆ ಹಸ್ತಾಂತರವಾಗಲಿದೆ.
ಧರ್ಮಸ್ಥಳದ ಎಸ್ಐಟಿ ತನಿಖೆ ಹೇಗಿರಲಿದೆ?
ಮೊದಲು ಎಫ್ಐಆರ್ ಮತ್ತು 164 ಅಡಿ ಹೇಳಿಕೆ ದಾಖಲಿಸಿಕೊಳ್ಳಲಿದೆ. ಬಳಿಕ ಜಡ್ಜ್ ಮುಂದೆ ಕೊಟ್ಟ ಹೇಳಿಕೆ ಮಾಹಿತಿ ಪಡೆಯಲಿರುವ ಎಸ್ಐಟಿ, ಹೇಳಿಕೆ ನೀಡಿದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಿದೆ. ಇದೇ ವೇಳೆ ಈಗಾಗಲೇ ಸಿಕ್ಕಿರುವ ಅಸ್ಥಿಪಂಜರದ ಡಿಎನ್ಎ ಪತ್ತೆ ಕಾರ್ಯ ನಡೆಯಲಿದೆ. ಇದಾದ ಮೇಲೆ ಬಾಕಿ ಉಳಿದಿರುವ ಅಸ್ಥಿಪಂಜರ ಹುಡುಕಾಟಕ್ಕೆ ಎಸ್ಐಟಿ ಮುಂದಾಗಲಿದೆ. ತನಿಖೆ ಬಳಿಕ ಕೋರ್ಟ್ ಗೆ ದೋಷಾರೋಪಪಟ್ಟಿ ಸಲ್ಲಿಕೆ ಮಾಡಲಿದೆ.
ದೂರುದಾರನ ಹೇಳಿಕೆಯಲ್ಲೇನಿದೆ?
1995ರಿಂದ 2014ರವರೆಗೆ ಧರ್ಮಸ್ಥಳದ ನೌಕರನಾಗಿದ್ದೆ. ನಾನು ಹಲವು ಶವಗಳನ್ನು ವಿಲೇವಾರಿ ಮಾಡಿದ್ದೇನೆ. ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು. ಇವೆಲ್ಲ ಅನಾಥ ಶವಗಳು ಅಂತ ನಾನು ಭಾವಿಸಿದ್ದೆ. ಆನಂತರ ನನಗೆ ಅನುಮಾನ ಬರಲು ಶುರುವಾಯ್ತು. ಕೆಲ ಮಹಿಳೆಯರ ಶವಗಳು ನಗ್ನ ಸ್ಥಿತಿಯಲ್ಲಿದ್ದವು. ಲೈಂಗಿಕ ಆಕ್ರಮಣ, ಹಿಂಸೆಯ ಕುರುಹುಗಳಿದ್ದವು.
ನಾನು ಪೊಲೀಸರಿಗೆ ಹೇಳಲು ಮುಂದಾದಾಗ ನನ್ನ ಮೇಲೆ ಹಲ್ಲೆ ಮಾಡಿದರು. ಶವ ಹೂತಿಟ್ಟ ವಿಚಾರ ಬಯಲು ಮಾಡದಂತೆ ಬೆದರಿಸಿದರು. ನಿನ್ನನ್ನೂ ಹೂತು ಹಾಕುತ್ತೇನೆ ಅಂತ ಬೆದರಿಕೆ ಹಾಕಿದರು. ನಾನು ಜೀವ ಭಯದಿಂದ 11 ವರ್ಷಗಳ ಹಿಂದೆ ಧರ್ಮಸ್ಥಳ ತೊರೆದೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದೆ. ಕೊಲೆಪಾತಕರು, ಅತ್ಯಾಚಾರಿಗಳು ಯಾರೆಂದು ಗೊತ್ತಾಗಬೇಕು. ಹೂತು ಹಾಕಿರುವ ಸ್ಥಳವನ್ನು ತೋರಿಸಲು ನಾನು ಸಿದ್ಧ. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ ಎಂದು ದೂರುದಾರ ಒತ್ತಾಯಿಸಿದ್ದಾರೆ.
ಎಸ್ ಐಟಿ ಧರ್ಮಸ್ಥಳದಲ್ಲಿ ಹೂತು ಹಾಕಿರುವ ಶವಗಳ ತನಿಖೆ ನಡೆಸುತ್ತಿರುವ ನಡುವೆಯೇ ಹಲವು ಯುವತಿಯರ ಅಸಹಜ ಸಾವು, ಶವಪತ್ತೆ ಪ್ರಕರಣಗಳ ತನಿಖೆ ನಡೆಸುವಂತೆ ಒತ್ತಡಗಳು ಕೇಳಿ ಬರುತ್ತಿವೆ. ಇದರ ನಡುವೆ ಧರ್ಮಸ್ಥಳ ದೇವಸ್ಥಾನದ ಆಡಳಿತ ಮಂಡಳಿ ಎಸ್ ಐಟಿ ರಚನೆಯನ್ನು ಸ್ವಾಗತಿಸಿದ್ದು, ತನಿಖೆಯಲ್ಲಿ ನಿಜಾಂಶ ಹೊರಗೆ ಬರಲಿ ಎಂದು ಆಗ್ರಹಿಸಿದೆ.



