ರಾಸಾಯನಿಕವಿದ್ದ ಬೃಹತ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ಭಾನುವಾರ ಸಂಭವಿಸಿದೆ.
ಮಂಡ್ಯ ತಾಲೂಕಿನ ಬಸರಾಳು ಬಳಿಯ ಕಾರೇಕಟ್ಟೆ ಗ್ರಾಮದ ಬಳಿಯ ಕೀರ್ತಿ ಕೆಮಿಕಲ್ಸ್ ಇಂಡಸ್ಟ್ರೀಸ್ನಲ್ಲಿ ಈ ದುರ್ಘಟನೆ ನಡೆದಿದ್ದು, ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರ ದೇಹಗಳು ಛಿದ್ರ, ಛಿದ್ರವಾಗಿವೆ. ಸ್ಥಳದಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಕೈ ಕಟ್ ಆಗಿದೆ.
ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರ ಮತ್ತು ಗಾಯಾಳುಗಳ ವಿವರ ಬಂದಿಲ್ಲ. ದುರ್ಘಟನೆ ಬಳಿಕ ಕಾರ್ಖಾನೆಯವರು ಸ್ಥಳದಿಂದ ನಾಪತ್ತೆಯಾಗಿದ್ದಾರೆ.
ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಮತ್ತು ಗಾಯಾಳುಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.



