ಅಧಿಕಾರ ಹಸ್ತಾಂತರ ಕುರಿತು ಯಾವುದೇ ಗೊಂದಲ ಇಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ನಿವಾಸದಲ್ಲಿ ಶನಿವಾರ ಉಪಹಾರ ಸೇವಿಸಿದ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಅಧಿಕಾರ ಹಂಚಿಕೆ ಕುರಿತ ಗೊಂದಲ ಕುರಿತು ಸ್ಪಷ್ಟನೆ ನೀಡಿದರು.
ಹೈಕಮಾಂಡ್ ಸೂಚನೆ ಮೇರೆಗೆ ಉಪಹಾರ ಸೇವಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆ. ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಅಧಿಕಾರ ಹಂಚಿಕೆ ಕುರಿತು ಮಾಧ್ಯಮಗಳು ಗೊಂದಲ ಸೃಷ್ಟಿಸಿದೆ. ಇದಕ್ಕೆ ಕೆಲವು ಶಾಸಕರು ಪ್ರತಿಕ್ರಿಯಿಸಿದ್ದಾರೆ. ನಾವು ಈಗ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ್ದೇ ಹೊರತು ಅಧಿಕಾರ ಹಂಚಿಕೆ ಕುರಿತು ಯಾವುದೇ ಗೊಂದಲ ಇಲ್ಲ ಎಂದು ಅವರು ಹೇಳಿದರು.
ನಾವು ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಹೇಳಿದ್ದೆ. ಈ ಹಿನ್ನೆಲೆಯಲ್ಲಿ ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೊರೆ ಹೋಗಿರಬಹುದು. ಅದು ನಾಯಕತ್ವ ಕುರಿತು ಅಸಮಾಧಾನದಿಂದ ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಮತ್ತು ಡಿಕೆ ಶಿವಕುಮಾರ್ ಒಟ್ಟಿಗೆ ಕೆಲಸ ಮಾಡಿದ್ದೆವು. ಅದೇ ರೀತಿ ಮುಂದೆಯೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ನಮ್ಮ ನಡುವೆ ಯಾವುದೇ ಗೊಂದಲ ಇಲ್ಲ. ಮುಂದೆಯೂ ಇರುವುದಿಲ್ಲ. 2028ರ ಚುನಾವಣೆಯಲ್ಲೂ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ. ಅಲ್ಲದೇ ಸ್ಥಳೀಯ ಸಂಸ್ಥೆ ಚುನಾವಣೆಯನ್ನೂ ಎದುರಿಸಲಿದ್ದೇವೆ ಎಂದು ಅವರು ಹೇಳಿದರು.
ನಂತರ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಮತ್ತು ನನ್ನ ನಡುವೆ ಯಾವುದೇ ಗೊಂದಲ ಇಲ್ಲ. ನನ್ನ ಬಣ ಯಾವುದೂ ಇಲ್ಲ. ನನ್ನ ಬಣ ಏನಿದ್ದರೂ ಕಾಂಗ್ರೆಸ್ ಬಣ. ಹೈಕಮಾಂಡ್ ತೀರ್ಮಾನಕ್ಕೆ ನಾವಿಬ್ಬರೂ ಬದ್ಧರಾಗಿದ್ದೇವೆ ಎಂದು ಅವರು ಹೇಳಿದರು.
ಹೈಕಮಾಂಡ್ ಸೂಚಿಸಿದರೆ ದೆಹಲಿ ಇಬ್ಬರೂ ಹೋಗುತ್ತೇವೆ. ನಾವು ಒಟ್ಟಾಗಿ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ. ಮುಂದಿನ ತಿಂಗಳು ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಅವಿಶ್ವಾಸ ಮಂಡಿಸಲು ಮುಂದಾಗಿವೆ. ಅದಕ್ಕೆ ನಾವು ಬಗ್ಗುವುದಿಲ್ಲ ಎಂದರು.



