ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಜೊತೆ ಕಡ್ಡಾಯವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಬೇಕೆಂಬುದು ನಮ್ಮ ಸರ್ಕಾರದ ಸಿದ್ದಾಂತವಾಗಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಈ ಆಸ್ಪತ್ರೆಗಳು ಕಾರ್ಯಾರಂಭ ಮಾಡಿವೆ ಎಂದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ.
ವಿಧಾನ ಪರಿಷದ್ ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಸ್ಥಾಪನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ಕೊಟ್ಟಿದ್ದಾರೆ. ಈ ನಿಯಮವನ್ನು ನಾವು ಈಗಾಗಲೇ ಅಳವಡಿಸಿಕೊಂಡು ಕಾರ್ಯಾರಂಭ ಮಾಡಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಜೊತೆಗೆ ಟ್ರಾಮಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು.
ಬೆಂಗಳೂರು-ಮೈಸೂರು, ಕಲಬುರಗಿ,ಹುಬ್ಬಳ್ಳಿಯ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಿದೆ. ಇದೇ ರೀತಿ ಬಾಗಲಕೋಟೆ, ಯಾದಗಿರಿ, ರಾಯಚೂರಿನಲ್ಲೂ ಶೀಘ್ರದಲ್ಲೇ ಕಾರ್ಯಾರಂಭ ಮಾಡಲಾಗುವುದು. ಬೀದರ್, ಕೊಪ್ಪಳ, ಬೆಳಗಾವಿಯಲ್ಲಿ ಎರಡರಿಂದ ಮೂರು ತಿಂಗಳೊಳಗೆ ಈ ಆಸ್ಪತ್ರೆಗಳು ಲೋಕಾರ್ಪಣೆಗೊಳ್ಳಲಿವೆ ಎಂದು ಪಾಟೀಲ್ ತಿಳಿಸಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ಅವರು ಜನತೆಗೆ ಧೈರ್ಯ ತುಂಬಿದರು.
ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದರು.
ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು. ಈ ವರ್ಷವು ಇಷ್ಟೇ ಪ್ರಮಾಣದಲ್ಲಿ ಇದೆ ಎಂದು ಸಚಿವರು ಹೇಳಿದರು.
ಬದಲಾದ ಜೀವನಶೈಲಿ, ಅಧಿಕ ಒತ್ತಡ, ಬೊಜ್ಜು, ಮದ್ಯಪಾನ, ಧೂಮಪಾನ, ಡ್ರಗ್ ಸೇವನೆ, ಕುಟುಂಬದ ಹಿನ್ನಲೆ ಇತ್ಯಾದಿ ಕಾರಣಗಳಿಂದ ಹೃದಯಘಾತಗಳು ಸಂಭವಿಸಿವೆ. ಯಾವುದೋ ಒಂದು ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ಜನತೆ ಆತಂಕಕ್ಕೆ ಒಳಗಾಗಬಾರದು ಎಂದು ಪಾಟೀಲ್ ಸಲಹೆ ಮಾಡಿದರು.



