ದಲಿತ ಕಲಾವಿದೆ ಮೇಲೆ ಹಲ್ಲೆ ನಡೆಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ದಲಿತ ಕಲಾವಿದೆ 55 ವರ್ಷದ ಜೋಗಿಲಾ ಸಿದ್ದರಾಜು ನೀಡಿದ ದೂರಿನ ಅನ್ವಯ ಬೆಂಗಳೂರಿನ ಎಸ್ಜೆ ಪಾರ್ಕ್ ಠಾಣೆ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೀರ್ಘಕಾಲದಿಂದ ಬಾಕಿ ಉಳಿದಿರುವ ಬಾಕಿ ಹಣವನ್ನು ಪಾವತಿಸಲು ಮನವಿ ಸಲ್ಲಿಸಲು ತೆರಳಿದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆಎಂ ಗಾಯತ್ರಿ ಹಲ್ಲೆ ನಡೆಸಿದ್ದೂ ಅಲ್ಲದೇ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕಳೆದ ಮೂರು ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ಕಲಾವಿದರ ಸಂಭಾವನೆ ಬಿಡುಗಡೆಗೆ ಮನವಿ ಮಾಡಲು ನಿರ್ದೇಶಕರ ಕಚೇರಿಗೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ.
ಗಾಯತ್ರಿ ವರ್ತನೆ ಕಂಡು ಅಸಮಾಧಾನಗೊಂಡ ದಲಿತ ಕಲಾವಿದರು ಮೇಲಧಿಕಾರಿಗಳಿಗೆ ದೂರು ನೀಡುವುದಾಗಿ ಜೋಗಿಲಾ ಸಿದ್ದರಾಜು ಹೇಳಿದಾಗ ಗಾಯತ್ರಿ ಕಂಪ್ಯೂಟರ್ ಮೌಸ್ ಪ್ಯಾಡ್ ಮುಖದ ಮೇಲೆ ಎಸೆದಿದ್ದಾರೆ. ಅಲ್ಲದೇ ವೀಡಿಯೋ ರೆಕಾರ್ಡ್ ಮಾಡಲು ಪ್ರಯತ್ನಿಸಿದ ದಲಿತ ಕಲಾವಿದರ ಸಹಚರರರ ಮೇಲೆ ಹಲ್ಲೆಗೆ ಯತ್ನಿಸಿದ್ದು ಮೊಬೈಲ್ ಕಸಿದುಕೊಂಡಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಗಾಯತ್ರಿ ಕೋಪದಲ್ಲಿ ಜಾತಿನಿಂದನೆ ಕೂಡ ಮಾಡಿದ್ದಾರೆ. ಇದರಿಂದ ತೀವ್ರ ಅಸಮಾಧಾನಗೊಂಡ ಕಲಾವಿದರು ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ಅನ್ವಯ ಪೊಲೀಸರಿಗೆ ದೂರು ನೀಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕಟಣೆಯ ಸಮಯದಲ್ಲಿ ಗಾಯತ್ರಿ ಆರೋಪಗಳಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿಲ್ಲ.


