ಮುಖ್ಯಮಂತ್ರಿ ಸಿಎಂ ಭಾಗವಹಿಸಿದ್ದ ತಟ್ಟೆ, ಬಟ್ಟೆ ಹಂಚುವ ಅಶೋಕ್ ರೈ ನೇತೃತ್ವದ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11ಕ್ಕೂ ಅಧಿಕ ಮಹಿಳೆಯರು ಮತ್ತು ಮಕ್ಕಳು ಅಸ್ವಸ್ಥಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ದೀಪಾವಳಿ ದಿನ ಸಂಭವಿಸಿದೆ.
ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸೋಮವಾರ ಪುತ್ತೂರಿನ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ನಡೆದ ”ಅಶೋಕ ಜನಮನ -2025” ಎಂಬ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಸಂಭವಿಸಿದ ನೂಕು ನುಗ್ಗಲಿನಲ್ಲಿ 11ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥಗೊಂಡಿದ್ದಾರೆ,
ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಅಧಿಕ ಮಂದಿ ಭಾಗಿಯಾಗಿದ್ದರಿಂದ ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಕೆಲವರು ಅಸ್ವಸ್ಥರಾಗಿದ್ದಾರೆ. ಸಿಎಂ ಕಾರ್ಯಕ್ರಮ ಆಗಿದ್ದರಿಂದ ಪೊಲೀಸ್ ಪ್ರೊಟೋಕಾಲ್ ಪ್ರಕಾರ ನೀರಿನ ಬಾಟಲಿಗಳನ್ನು ವಿತರಣೆ ಮಾಡಿರಲಿಲ್ಲ. ಆದ್ದರಿಂದ, ಬಿಸಿಲಿನ ಧಗೆಗೆ ಜನರು ಕುಡಿಯಲು ನೀರೂ ಸಿಗದೇ ಪರದಾಟ ನಡೆಸಿದ್ದರು.
ಸಣ್ಣ ಮಕ್ಕಳನ್ನು ಹಿಡಿದುಕೊಂಡು ಜನರು ಕಾರ್ಯಕ್ರಮಕ್ಕೆ ಬಂದಿದ್ದು, ಮಳೆಯಿಂದ ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆಯಾಗಿತ್ತು. ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾಸಕ ಅಶೋಕ್ ರೈ ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದರು.



