ಬೆಂಗಳೂರು: 2026ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಫಲಿತಾಂಶ ಪ್ರಕಟಣೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸುಲಭವಾಗಿ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದು ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ ಫಲಿತಾಂಶ ಪರಿಶೀಲಿಸಬಹುದು.
ರಾಜ್ಯಾದ್ಯಂತ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಗೆ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಬಾರಿ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯು ವಿಶೇಷ ಕ್ರಮಗಳನ್ನು ಕೈಗೊಂಡಿತ್ತು.
ವಿದ್ಯಾರ್ಥಿಗಳು ಫಲಿತಾಂಶದ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದವರು ಅಥವಾ ಅನುತ್ತೀರ್ಣರಾದವರು ಧೃತಿಗೆಡಬೇಡಿ. ಸುಧಾರಿತ ಪರೀಕ್ಷಾ ಪದ್ಧತಿಯಡಿ ಪರೀಕ್ಷೆ-2 ಮತ್ತು ಪರೀಕ್ಷೆ-3ರ ಮೂಲಕ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಸುವರ್ಣ ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿ ವಿಷಯಕ್ಕೆ ಗ್ರೇಡ್ ನೀಡುವ ಬದಲಾಗಿ ಅಂಕಗಳನ್ನೇ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ಸರ್ಕಾರ ಈ ಮೊದಲು ನಿರ್ಧರಿಸಿತ್ತು. ಆದರೆ, ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ವರ್ಷ ಗ್ರೇಡ್ ಬದಲು ಅಂಕ ನೀಡುವಂತೆ ಆದೇಶಿಸಿತ್ತು.
ನ್ಯಾಯಾಲಯದ ಆದೇಶವನ್ನು ಸರ್ಕಾರ ಸ್ವಾಗತಿಸುತ್ತದೆ. ಅದರಂತೆ ಈ ವರ್ಷ ಅಂಕಗಳನ್ನೇ ನೀಡಲಾಗುವುದು. ಮುಂದಿನ ವರ್ಷ ಗ್ರೇಡ್ ನೀಡುವ ಕುರಿತು ಸರ್ಕಾರ ಮರು ಚಿಂತನೆ ನಡೆಸಿ ನಿರ್ಧರಿಸಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.



