ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ್ ಹಿರಿಮನೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಮಳಲಿ ಗ್ರಾಮದ ನಿವಾಸಿಯಾಗಿದ್ದು, ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ಅಸಿಮ್ ಎಂಬುವರ ಫೋಟೋವನ್ನು ಎಡಿಟ್ ಮಾಡಿ ಸೇರಿಸಿದ್ದರು. ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ಫೇಸ್ಬುಕ್ನಲ್ಲಿ ಹರಿಬಿಡಲಾಗಿತ್ತು.
ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ಫೆ.24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.



