ಹುಬ್ಬಳ್ಳಿ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವೃದ್ಧೆಯರು ಮೃತಪಟ್ಟ ಘಟನೆ ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಸಂಭವಿಸಿದೆ.
ವರೂರು ಗ್ರಾಮದಿಂದ ಮರಳುತ್ತಿದ್ದಾಗ ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳಾದ ಸುಜಾತಾ ಹೀರೇಮಠ [62], ಗಾಯತ್ರಿ ಮಹಾಂತಮಠ [72], ಶಕುಂತಲಾ ಹೀರೇಮಠ [60] ಮತ್ತುಸಂಪತಕುಮಾರಿ ಕಲ್ಮಠ [63] ಮೃತಪಟ್ಟಿದ್ದಾರೆ.
ಹಾವೇರಿಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಹುಬ್ಬಳ್ಳಿಗೆ ಮರಳುವಾಗ ಈ ದುರಂತ ಸಂಭವಿಸಿದೆ. ಕೆನರಾ ಬ್ಯಾಂಕ್ ನಿವೃತ್ತ ನೌಕರ ವಿರೇಶ್ ಹೀರೇಮಠ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಮೃತರ ಶವಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



