ಕಳೆದೆರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಸೆಪ್ಟೆಂಬರ್ 11ರಿಂದ ರಾಜ್ಯದ ಬಹುತೇಕ ಕಡೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬೀದರ್, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಭಾಗಮಂಡಲ, ಗೋಕರ್ಣ, ಧರ್ಮಸ್ಥಳ, ಹೊನ್ನಾವರ, ಆಗುಂಬೆ, ಬೆಂಗಳೂರು ಗ್ರಾಮಾಂತರ, ಟಿ.ಜಿ.ಹಳ್ಳಿ, ಕುಂದಾಪುರ, ಕೊಟ್ಟಿಗೆಹಾರ, ಪೊನ್ನಂಪೇಟೆ, ಮೈಸೂರು, ಮಂಕಿ ಹಾಗೂ ಮಂಗಳೂರಿನಲ್ಲಿ ಭಾನುವಾರ ಮಳೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇರಲಿದೆ. ಇನ್ನೂ ಮೂರು ದಿನ ಮಳೆಯ ನಿರೀಕ್ಷೆ ಇಲ್ಲದೇ ಇದ್ದರೂ ಮೋಡ ಕವಿದ ವಾತಾರಣ ಇರಲಿದೆ.
ದೇಶದ ಹಲವೆಡೆ ಸೆಪ್ಟೆಂಬರ್ ತಿಂಗಳಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇತ್ತೀಚೆಗೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ, ಪ್ರತಿ ವರ್ಷ ಸೆಪ್ಟೆಂಬರ್ನಲ್ಲಿ 167.9 ಮಿ.ಮೀ ಮಳೆಯಾಗುತ್ತದೆ. ಈ ಬಾರಿ, ಸಾಮಾನ್ಯಕ್ಕಿಂತ ಶೇ.109ರಷ್ಟು ಹೆಚ್ಚಿನ ಮಳೆಯಾಗುವ ಸೂಚನೆಗಳಿವೆ ಎಂದು ತಿಳಿಸಿತ್ತು.
ಈಶಾನ್ಯ ಭಾರತ, ಪೂರ್ವ ಭಾರತ, ದಕ್ಷಿಣ ಭಾರತ ಮತ್ತು ವಾಯುವ್ಯ ಭಾರತದ ಅನೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ದೇಶದ ಉಳಿದ ಭಾಗಗಳಲ್ಲಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.



