Monday, July 6, 2026
Google search engine
Homeಕಾನೂನುಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಮುದ್ರಾಂಕ ಶುಲ್ಕ ನಿರಾಕರಿಸುವಂತಿಲ್ಲ: ಹೈಕೋರ್ಟ್

ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಮುದ್ರಾಂಕ ಶುಲ್ಕ ನಿರಾಕರಿಸುವಂತಿಲ್ಲ: ಹೈಕೋರ್ಟ್

ಬೆಂಗಳೂರು: ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ವ್ಯವಹಾರ ರದ್ದಾದರೆ ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿ ಮಾಡುವಂತೆ ಕೋರುವ ಮನವಿಯನ್ನು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ವಿಳಂಬದ ನೆಪವೊಡ್ಡಿ ಮರುಪಾವತಿ ಅರ್ಜಿಯನ್ನು ತಿರಸ್ಕರಿಸಿದ್ದ ಜಿಲ್ಲಾ ನೋಂದಣಾಧಿಕಾರಿಗಳ ಕ್ರಮ ಪ್ರಶ್ನಿಸಿ ಬೆಳಗಾವಿಯ ಗೋಪಾಲರಾವ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿದಾರರ ಮನವಿಯನ್ನು ಮುಂದಿನ ಎಂಟು ವಾರಗಳೊಳಗೆ ಮರು ಪರಿಶೀಲಿಸುವಂತೆ ಆದೇಶಿಸಿದೆ.

ಕರ್ನಾಟಕ ಮುದ್ರಾಂಕ ಕಾಯ್ದೆ 1957ರ ಸೆಕ್ಷನ್ 52ಎ ಅಡಿಯಲ್ಲಿ ಶುಲ್ಕ ಮರುಪಾವತಿ ಕೋರಲು ಯಾವುದೇ ನಿರ್ದಿಷ್ಟ ಕಾಲಮಿತಿಯನ್ನು ವಿಧಿಸಲಾಗಿಲ್ಲ. ಅಧಿಕಾರಿಗಳು ಯಾವುದೇ ಕಾನೂನು ಅಥವಾ ಸುತ್ತೋಲೆಯ ಆಧಾರವಿಲ್ಲದೆ ಸ್ವಯಂಪ್ರೇರಿತವಾಗಿ ಒಂದು ವರ್ಷದ ಕಾಲಮಿತಿ ಹೇರಿರುವುದು ಕಾನೂನುಬಾಹಿರವಾಗಿದೆ. ಅಲ್ಲದೆ, ಕರ್ನಾಟಕ ನೋಂದಣಿ ನಿಯಮಗಳು 1965ರ ನಿಯಮ 193ರ ಪ್ರಕಾರ, ನೋಂದಣಿ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಳ್ಳುವ ಮುನ್ನ ತಾನು ಮಂಡಿಸಿದ ದಾಖಲೆಗಳನ್ನು ಹಿಂಪಡೆಯುವ ಪೂರ್ಣ ಹಕ್ಕು ಅರ್ಜಿದಾರರು ಹೊಂದಿರಲಿದ್ದಾರೆ ಎಂದು ತಿಳಿಸಲಾಗಿದೆ.

ವ್ಯವಹಾರವೇ ರದ್ದಾಗಿರುವಾಗ ಸಾರ್ವಜನಿಕರ ಹಣವನ್ನು ಇಟ್ಟುಕೊಳ್ಳುವ ಹಕ್ಕು ಸರ್ಕಾರಕ್ಕಿಲ್ಲ. ನಿಯಮಾವಳಿಗಳ ಪ್ರಕಾರ ನಕಲು ವೆಚ್ಚ ಹಾಗೂ ಅರ್ಧದಷ್ಟು ನೋಂದಣಿ ಶುಲ್ಕವನ್ನು ಕಡಿತಗೊಳಿಸಿ ಉಳಿದ ಹಣವನ್ನು ಖರೀದಿದಾರನಿಗೆ ಹಿಂದಿರುಗಿಸಬೇಕು. ಉದ್ದೇಶಿತ ಆಸ್ತಿ ವ್ಯವಹಾರವು ಪೂರ್ಣಗೊಳ್ಳದೆ ಮಧ್ಯದಲ್ಲೇ ಕೈಬಿಡಲಾಗುತ್ತದೆಯೋ, ಆಗ ಸಾರ್ವಜನಿಕರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸುವುದು ಕಾನೂನಿನ ಆಶಯವಾಗಿದೆ. ಕರ್ನಾಟಕ ಮುದ್ರಾಂಕ ಕಾಯ್ದೆಯ ನಿಯಮಗಳ ಅಡಿಯಲ್ಲಿ ಅರ್ಜಿದಾರರ ಮರುಪಾವತಿ ಕೋರಿಕೆಯನ್ನು ಹೊಸದಾಗಿ ಪರಿಶೀಲಿಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಬೆಳಗಾವಿ ಜಿಲ್ಲಾ ನೋಂದಣಾಧಿಕಾರಿಗಳಿಗೆ ನಿರ್ದೇಶನ ನೀಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:

ಅರ್ಜಿದಾರ ಗೋಪಾಲರಾವ್ ಅವರು ಬೆಳಗಾವಿಯಲ್ಲಿ ವಸತಿ ನಿವೇಶನವೊಂದನ್ನು ಖರೀದಿಸಲು ಮುಂದಾಗಿದ್ದರು. ಆಸ್ತಿ ನೋಂದಣಿಗಾಗಿ ಒಟ್ಟು 5,88,112 ರೂ. ಮುದ್ರಾಂಕ ಶುಲ್ಕ ಮತ್ತು ನೋಂದಣಿ ವೆಚ್ಚವನ್ನು ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಮೂಲಕ ಪಾವತಿಸಿದ್ದರು.

ನೋಂದಣಿ ಪ್ರಕ್ರಿಯೆಯ ಮಧ್ಯೆ, ಉಪನೋಂದಣಾಧಿಕಾರಿಗಳು ಆಸ್ತಿಯ ಮಾರುಕಟ್ಟೆ ಮೌಲ್ಯದ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರಕರಣವನ್ನು ಪ್ರಾದೇಶಿಕ ಆಯುಕ್ತರಿಗೆ ವಹಿಸಿದ್ದರು. ಪ್ರಾದೇಶಿಕ ಆಯುಕ್ತರು ನಿಗದಿಪಡಿಸಿದ ಹೆಚ್ಚಿನ ಮಾರುಕಟ್ಟೆ ಮೌಲ್ಯದಿಂದಾಗಿ ಈ ವ್ಯವಹಾರ ತಮಗೆ ಆರ್ಥಿಕವಾಗಿ ಲಾಭದಾಯಕವಲ್ಲ ಎಂಬುದಾಗಿ ಅರ್ಜಿದಾರರು ತಿಳಿದುಕೊಂಡಿದ್ದರು. ಬಳಿಕ ಆ ಆಸ್ತಿಯ ಖರೀದಿಯಿಂದ ಹಿಂದೆ ಸರಿದಿದ್ದು, ನೋಂದಣಿ ಪ್ರಕ್ರಿಯೆಯನ್ನು ಹಿಂಪಡೆದಿದ್ದರು.

ಬಳಿಕ ತಾವು ಈಗಾಗಲೇ ಪಾವತಿಸಿದ್ದ ಹಣವನ್ನು ವಾಪಸ್ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಕುರಿತ ದಾಖಲೆ ಸಲ್ಲಿಕೆಯಾದ ಒಂದು ವರ್ಷದ ಬಳಿಕ ಮರುಪಾವತಿಗೆ ಅರ್ಜಿ ಸಲ್ಲಿಸಲಾಗಿದೆ ಎಂಬ ತಾಂತ್ರಿಕ ಕಾರಣ ನೀಡಿದ್ದ ನೋಂದಣಿ ಇಲಾಖೆಯ ಅಧಿಕಾರಿಗಳು ಮನವಿ ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಆಗಿತ್ತು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments