ಚಿಕ್ಕಬಳ್ಳಾಪುರ: 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಕಾಲ ನಮ್ಮ ಸರ್ಕಾರ ಬಂಡೆಯಂತೆ ಇರುತ್ತದೆ ಎಂದರು.
ಬಿಜೆಪಿಯವರು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸುಭದ್ರ ಸರ್ಕಾರ ಇರುವುದಕ್ಕೆ ಅವರಿಗೆ ಹೊಟ್ಟೆಯುರಿ ಎಂದು ಅವರು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಿಮಗೆ ಏನಾದರೂ ಅನುಮಾನ ಇದೆಯಾ ಎಂದು ಪ್ರಶ್ನಿಸಿದರು. ಅಲ್ಲದೇ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಏನು ಕಾಂಗ್ರೆಸ್ ಹೈಕಮಾಂಡಾ ಎಂದು ತಿರುಗೇಟು ನೀಡಿದರು.
ಇದೇ ವೇಳೆ ಡಿಕೆ ಶಿವಕುಮಾರ್ ಮಾತನಾಡಿ, ಪಕ್ಷದಲ್ಲಿ ಸಿಎಂ ಸ್ಥಾನದ ಬಗ್ಗೆ ಯಾರಿಗೂ ಅಸಮಾಧಾನವಿಲ್ಲ. ಸುರ್ಜೆವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದು ಸಿಎಂ ಬದಲಾವಣೆಯ ಕುರಿತು ಅಭಿಪ್ರಾಯ ಸಂಗ್ರಹಕ್ಕೆ ಅಲ್ಲ. ಇಕ್ಬಾಲ್ ಹುಸೇನ್ ಹಾಗೆ ಯಾಕೆ ಮಾತನಾಡಿದರು ಎಂಬುದು ಗೊತ್ತಿಲ್ಲ. ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದರು.



