ರಾಜಸ್ಥಾನದ ಜೈಪುರ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಐಸಿಯುನಲ್ಲಿ ಸಂಭವಕಿಸಿದ ಅಗ್ನಿ ದುರಂತದಲ್ಲಿ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ.
ಸೋಮವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. 6 ಮಂದಿ ಸ್ಥಳದಲ್ಲೇ ಮೃತಟ್ಟರೆ, ಚಿಂತಾಜನಕ ಸ್ಥಿತಿಯಲ್ಲಿದ್ದ 5 ಮಂದಿಯ ಪೈಕಿ ಇಬ್ಬರು ಚಿಕಿತ್ಸೆ ನೀಡುವಾಗ ಸೋಮವಾರ ಬೆಳಿಗ್ಗೆ ಅಸುನೀಗಿದ್ದಾರೆ.
ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಇದ್ದ ಎರಡು ಐಸಿಯುಗಳ ಪೈಕಿ ಒಂದರಲ್ಲಿ 11 ರೋಗಿಗಳು, ಮತ್ತೊಂದರಲ್ಲಿ 13 ರೋಗಿಗಳಿದ್ದರು ಎನ್ನಲಾಗಿದೆ. ವೈದ್ಯರು ಹೊರಗಿನಿಂದ ಚಿಲಕ ಹಾಕಿದ್ದರಿಂದ ರೋಗಿಗಳು ಹೊರಗೆ ಬರಲು ಆಗದೇ ಬೆಂಕಿಗೆ ಆಹುತಿಯಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಾಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಮತ್ತು ನಾಲ್ವರು ಪುರುಷ ಸೇರಿ 8 ರೋಗಿಗಳು ಮೃತಪಟ್ಟಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದೆ ಎಂದು ಟ್ರಾಮಾ ಸೆಂಟರ್ ಉಸ್ತುವಾರಿ ಡಾ.ಅನುರಾಗ್ ಧಾಕಡ್ ತಿಳಿಸಿದ್ದಾರೆ.
ಆಸ್ಪತ್ರೆಯ ದಾಖಲೆ ಪತ್ರಗಳು, ಐಸಿಯು ಉಪಕರಣಗಳು, ಲ್ಯಾಬ್ ಬೆಂಕಿಗಾಹುತಿಯಾಗಿದೆ. ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳ ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ, ಸತತ 2 ಗಂಟೆಗಳ ಕಾರ್ಯಚರಣೆ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ದುರಂತ ಸಂಭವಿಸುತ್ತಿದ್ದಂತೆ ಆಸ್ಪತ್ರೆಯ ಸಿಬ್ಬಂದಿಯು ರೋಗಿಗಳ ರಕ್ಷಣೆಗೆ ನಿಲ್ಲದೇ ಸ್ಥಳದಿಂದ ಓಡಿಹೋಗಿದ್ದಾರೆಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ



